ಹನಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಯಾವುದೇ ದಾಖಲಾತಿ ಇಲ್ಲದೆ ಮಹಿಳೆಯರಿಗೆ ಸಾಲ ನೀಡಿ ಸ್ವ-ಉದ್ಯೋಗ ಕೈಗೊಳ್ಳಲು ನೆರವಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಎಚ್.ಎಲ್.ಮುರುಳಿಧರ್ ತಿಳಿಸಿದರು.
ಹನಗೋಡು ಹೋಬಳಿಯ ಬೀರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಯಾವುದೇ ದಾಖಲೆ ಪಡೆಯದೆ ಸಂಘದ ಮಹಿಳೆಯರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಿ ಸ್ವಂತ ಉದ್ಯೋಗ ಕೈಗೊಳ್ಳಲು ನೆರವಾಗುತ್ತಿದೆ. ಇದರ ಪರಿಣಾಮ ರಾಜ್ಯದಲ್ಲಿ ಸಾವಿರಾರು ಮಹಿಳೆಯರು ಸ್ವಯಂ ಉದ್ಯೋಗದೊಂದಿಗೆ ತಮ್ಮ ಮಕ್ಕಳ ಮುಂದಿನ ಭವಿಷ್ಯ ರೂಪಿಸಲು ಆರ್ಥಿಕವಾಗಿ ಸಬಲರಾಗಿ ಸದೃಢರಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಸಂಸ್ಥೆಯ ಜನಜಾಗೃತಿ ಸಮಿತಿ ಸದಸ್ಯ ದಾ.ರಾ.ಮಹೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಗ್ರಾಮಾಭ್ಯುದಯ, ಆರ್ಥಿಕ ಸಬಲತೆ, ಕೃಷಿ, ಸಾಮಾಜಿಕ ಕ್ಷೇತ್ರ, ಜನರ ಜೀವನಮಟ್ಟ ಸುಧಾರಣೆ ಸೇರಿದಂತೆ ಹಲವು ಸಮಾಜಮುಖಿ ಚಿಂತನೆಗಳಿಂದಿಗೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು, ರಾಜ್ಯದೆಲ್ಲೆಡೆ ಮನೆ ಮಾತಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹೆಗ್ಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ, ಉಪಾಧ್ಯಕ್ಷೆ ನಾಗರತ್ನ, ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ, ಮುಖಂಡ ಮಹದೇವಪ್ಪ, ಮೇಲ್ವಿಚಾರಕಿ ಸುನಂದಾ, ಸೇವಾಪ್ರತಿನಿಧಿ ಆನಂದ್, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.