ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮು ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಯುವಕನ ಪಾಲಕರಿಂದ ಹಣ ಪಡೆದ ಆರೋಪದ ಮೇಲೆ ಆಸ್ಪತ್ರೆ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎ್ಐಆರ್ ದಾಖಲಾಗಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ದೂರು ಸಲ್ಲಿಸಿದ್ದಾರೆ. ಇದರ ಆಧಾರದ ಮೇಲೆ ಸೇಂಟ್ ಜಾನ್ಸ್ ಆಸ್ಪತ್ರೆ ಮತ್ತು ವೈದ್ಯ ಡಾ.ಸಾಗರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿತರಿಂದ ನೋಟಿಸ್ ಕೊಟ್ಟು ವಿಚಾರಣೆಗೆ ಕರೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪಟಾಕಿ ಗೋದಾಮು ಸ್ಫೋಟ ಪ್ರಕರಣದಲ್ಲಿ ಗಾರೆಬಾವಿಪಾಳ್ಯದ ವೆಂಕಟೇಶ್(31) ಗಾಯಗೊಂಡಿದ್ದ. ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಗುರುವಾರ ಅಸುನೀಗಿದ್ದರು. ವೆಂಕಟೇಶ್, ಪಾಲಕರು ಆಸ್ಪತ್ರೆ ವಿರುದ್ಧ ನಿರ್ಲಕ್ಷ್ಯದ ಆರೋಪ ಮಾಡಿದ್ದರು. ಅಲ್ಲದೆ, ಚಿಕಿತ್ಸಾಗಿ ಹಣ ಪಾವತಿ ಮಾಡುವಂತೆ ಪದೇ ಪದೆ ಕರೆ ಮಾಡಿ ಒತ್ತಾಯ ಮಾಡಿರುವುದಾಗಿ ವೆಂಕಟೇಶ್ ತಂದೆ ಆರೋಪ ಮಾಡಿದ್ದಾರೆ.
ಘಟನಾ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ್ದರು. ಜತೆಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೂಲಕ ಆಸ್ಪತ್ರೆ ಮುಖ್ಯಸ್ಥರನ್ನು ಭೇಟಿ ಮಾಡಿಸಿ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೂ ಡಾ.ಸಾಗರ್, ದೂರವಾಣಿ ಮೂಲಕ ವೆಂಕಟೇಶ್ ಪಾಲಕರಿಗೆ ಕರೆ ಮಾಡಿ ಹಣ ಪಡೆದಿರುವುದು ಕಂಡುಬಂದಿದೆ. ಆರೋಪತರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.