ಭೋಪಾಲ್: ಮಧ್ಯಪ್ರದೇಶ ರಾಜಧಾನಿ ಭೋಪಾಲ್ನಲ್ಲಿರುವ ವಲ್ಲಭ ಭವನದ ರಾಜ್ಯ ಸಚಿವಾಲಯದಲ್ಲಿ ಶನಿವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಹುಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಮಗ್ನರಾಗಿದ್ದಾರೆ.
ಇದನ್ನೂ ಓದಿ: ಶೈತಾನ್ ನಿರೀಕ್ಷೆಗೂ ಮೀರಿ ಪ್ರದರ್ಶನ: ಡೇ 1 ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಕೋಟಿ ಗೊತ್ತಾ? ವಿವರ ಇಲ್ಲಿದೆ..
ಶುಚಿಗೊಳಿಸುವ ಕೆಲವು ಕಾರ್ಮಿಕರು ಕಟ್ಟಡದಿಂದ ಹೊರಗೆ ಹೊಗೆ ಬರುತ್ತಿರುವುದನ್ನು ಗಮನಿಸಿದ ನಂತರ ಅವರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗೆ ಕರೆ ಮಾಡಿ ವಿಷಯ ತಿಳಿಸಿದರು ಎಂದು ಮೂಲಗಳು ತಿಳಿಸಿವೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ನೈರ್ಮಲ್ಯ ಕಾರ್ಮಿಕ ವಿಶಾಲ್ ಬೆಳಗ್ಗೆ ಸಚಿವಾಲಯದ ಗೇಟ್ ಮುಂಭಾಗದಲ್ಲಿ ಸ್ವಚ್ಛಗೊಳಿಸುತ್ತಿದ್ದಾಗ ಕಟ್ಟಡದಿಂದ ಹೊಗೆ ಹೊರಹೊಮ್ಮುತ್ತಿರುವುದನ್ನು ಕಂಡಿದ್ದು, ತಕ್ಷಣ ಘಟನೆಯ ಬಗ್ಗೆ ಮಹಾನಗರ ಪಾಲಿಕೆಯ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ನಂತರ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬಂದವು. ಈ ಭಾರಿ ಬೆಂಕಿಯಿಂದ ವಲ್ಲಭ ಭವನಕ್ಕೆ ಆಗಿರುವ ಹಾನಿಯ ಬಗ್ಗೆ ಬೆಂಕಿ ನಂದಿಸಿದ ನಂತರವೇ ತಿಳಿಯಲಿದೆ ಎಂದು ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.
ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ನನ್ನ ಅರಿವಿಗೆ ಬಂದಿದೆ. ಜಿಲ್ಲಾಧಿಕಾರಿಯಿಂದ ಬಂದ ಮಾಹಿತಿ ಮೇರೆಗೆ ನಿಗಾ ವಹಿಸುವಂತೆ ಸಿಎಸ್ಗೆ ಹೇಳಿದ್ದೇನೆ- ಘಟನೆಯ ವಿವರವಾದ ಮಾಹಿತಿ ತರಿಸಿಕೊಳ್ಳಲಾಗುವುದು. ಯಾವುದೇ ದಾಖಲೆಗಳು ಮತ್ತು ಪ್ರಮುಖ ಕಡತಗಳು ನಾಶವಾಗದಂತೆ ಎಚ್ಚರಿಕೆ ವಹಿಸಲು ನಿರ್ದೇಶನ ನೀಡಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.