ಸಿಂಧನೂರು: ಅಗ್ನಿ ದುರಂತ ಸಂಭವಿಸಿದಾಗ ಆತಂಕಕ್ಕೆ ಒಳಗಾಗದೆ, ಅಗ್ನಿಶಾಮಕ ಇಲಾಖೆ ನೀಡಿರುವ ಸಲಹೆ, ಸೂಚನೆಗಳನ್ನು ಸಂಯಮದಿಂದ ಪಾಲಿಸಿ ಹೆಚ್ಚಿನ ದುರಂತ ತಪ್ಪಿಸಬೇಕೆಂದು ಅಗ್ನಿ ಶಾಮಕ ಠಾಣೆ ಅಧಿಕಾರಿ ನರಸಪ್ಪ ಹೇಳಿದರು.
ನಗರದ ವಿವಿಧೆಡೆ ಆಯೋಜಿಸಿದ್ದ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ಅಗ್ನಿ ಸುರಕ್ಷತೆಯನ್ನು ಖಚಿತ ಪಡಿಸಿಕೊಳ್ಳಿ, ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿ ಎನ್ನುವ ಧ್ಯೇಯವಾಕ್ಯದೊಂದಿಗೆ ಅಗ್ನಿಶಾಮಕ ಸೇವಾ ಸಪ್ತಾಹ ಆಚರಿಸಲಾಗುತ್ತಿದೆ. ಅಗ್ನಿ ಸುರಕ್ಷತೆ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಲಾಗುತ್ತಿದೆ. ಕೈಗಾರಿಕೆಗಳು, ವಿದ್ಯಾ ಕೇಂದ್ರಗಳು, ಬಹುಮಡಿ ಕಟ್ಟಡ, ವಾಣಿಜ್ಯ ಸಂಕೀರ್ಣಗಳಲ್ಲಿ ಅಗ್ನಿ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.