ಪಡುಬಿದ್ರಿ: ಎರಡನೇ ಹಂತದ ಪ್ಯಾಕೇಜ್ನಲ್ಲಿ ಮೀನುಗಾರರಿಗೆ ಸರ್ಕಾರ ಘೋಷಿಸಿರುವ ಪರಿಹಾರವನ್ನು ಯಾವ ರೀತಿಯಲ್ಲಿ ಯಾರಿಗೆ ನೀಡಬೇಕೆನ್ನುವ ಬಗ್ಗೆ ಶುಕ್ರವಾರ ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.
ಕಾಪು ಕ್ಷೇತ್ರ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಯವರನ್ನು ಮತ್ತೊಮ್ಮೆ ಭೇಟಿ ಮಾಡಿ ಹೆಚ್ಚುವರಿ ಸೌಲಭ್ಯ ಪಡೆಯಲು ಗಮನಹರಿಸಲಾಗುವುದು ಎಂದರು.
ಹೆಜಮಾಡಿ ಬಂದರು, ಪ್ರಾಕೃತಿಕ ವಿಕೋಪ, ಮೀನುಗಾರಿಕಾ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೀನುಗಾರರ ಹಲವು ಬೆೇಡಿಕೆಗಳ ಮನವಿಯನ್ನು ಶಾಸಕ ಲಾಲಾಜಿ ಆರ್. ಮೆಂಡನ್ ಸಚಿವರಿಗೆ ಸಲ್ಲಿಸಿದರು.
ಕಾಪು ತಾಲೂಕಿನಲ್ಲಿ ಮೀನುಗಾರಿಕಾ ಕಚೇರಿ, ಹೆಜಮಾಡಿ ಬಂದರು ಕಾಮಗಾರಿ ಶೀಘ್ರ ಆರಂಭ, ಮೀನುಗಾರರ ಉಳಿತಾಯ ಪರಿಹಾರ ಯೋಜನೆಯಲ್ಲಿ ಮೀನುಗಾರರ ಸಹಕಾರಿ ಸಂಘಗಳ 60 ವರ್ಷ ಮೇಲ್ಪಟ್ಟ ಸದಸ್ಯರಿಗೂ ಸವಲತ್ತು, 60 ವರ್ಷ ಮೇಲ್ಪಟ್ಟ ಮೀನುಗಾರರಿಗೂ ಕೋವಿಡ್ ಸಂಕಷ್ಟ ಪರಿಹಾರ ,ಕಾಪು ಲೈಟ್ಹೌಸ್ ಬಳಿ ಮೀನುಗಾರಿಕಾ ಜೆಟ್ಟಿ ನಿರ್ಮಾಣಕ್ಕೆ ಸಂಬಂಧಿಸಿ ವಿವಿಧ ಮೀನುಗಾರಿಕಾ ಸಂಘಟನೆಗಳ ಪದಾಧಿಕಾರಿಗಳು ಸಚಿವರಿಗೆ ಮನವಿ ಸಲ್ಲಿಸಿದರು.
ಕಾಪುವಿಗೆ ಭೇಟಿ ನೀಡಿದ ಸಚಿವರನ್ನು ಸನ್ಮಾನಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ರಾಷ್ಟ್ರೀಯ ಮೀನುಗಾರ ವೇದಿಕೆ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ನಿಕಟಪೂರ್ವ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.