ಮಥುರಾ: ಕಾರು ಹಾಗೂ ಬಸ್ಸಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಜೀವ ದಹನವಾಗಿರುವ ಘಟನೆ ಉತ್ತರಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಘಟನೆಯು ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಆಗ್ರಾ-ನೋಯ್ಡಾ ಕ್ಯಾರೇಜ್ ಮಾರ್ಗದ 117 ನೇ ಮೈಲಿಗಲ್ಲು ಬಳಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ನವರು ಕಡಿದು ಕಟ್ಟೆ ಹಾಕಿದ್ದು ಏನಿಲ್ಲ: ವಿಜಯೇಂದ್ರ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮೃತರು ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮೊದಲಿಗೆ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಆ ನಂತರ ಬಸ್ಗೆ ಡಿಕ್ಕಿ ಹೊಡೆದಿದೆ. ಕ್ಷಣಾರ್ಧದಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಐವರು ಸಜೀವ ದಹನವಾಗಿದ್ದಾರೆ. ಕಾರಿನಲ್ಲಿದ್ದವರು ಆಗ್ರಾದಿಂದ ನೋಯ್ಡಾಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
40 ಜನರಿದ್ದ ಸ್ಲೀಪರ್ ಕೋಚ್ ಬಸ್ ಕಾರಿಗೆ ಡಿಕ್ಕಿ ಹೊಡೆದಿತ್ತು. ಪೊಲೀಸರ ಪ್ರಕಾರ, ಬಸ್ ಬಿಹಾರದಿಂದ ದೆಹಲಿ ಕಡೆಗೆ ಚಲಿಸುತ್ತಿತ್ತು. ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ. ಮೃತರ ಗುರುತನ್ನು ಪತ್ತೆ ಹಚ್ಚಲಾಗುತ್ತಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿ ಸಾವಿಗೆ ಸಂತಾಪ ಸೂಚಿಸಿ ಗಾಯಗೊಂಡವರಿಗೆ ನೆರವು ನೀಡುವಂತೆ ಆದೇಶಿಸಿದ್ಧಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.