ಬೆಂಗಳೂರು ಗ್ರಾಮಾಂತರ : ಮಹಾಮಾರಿ ಕರೊನಾ ಸೋಂಕಿನ ಸಂದರ್ಭದಲ್ಲಿ ಪ್ರಾಣ ಒತ್ತೆ ಇಟ್ಟು ಕರ್ತವ್ಯ ನಿರ್ವಹಿಸಿದ ಕರೊನಾ ಸೇನಾನಿಗಳಿಗೆ ನಾವೆಲ್ಲರೂ ಚಿರಋಣಿಯಾಗಿರಬೇಕು ಎಂದು ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಹೊಸಕೋಟೆಯಲ್ಲಿ ಕಾರ್ಮಿಕ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರು ಹಾಗೂ ನಗರಸಭೆ ಸಿಬ್ಬಂದಿ ದಿನಸಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕರೊನಾ ಸಂದರ್ಭದಲ್ಲಿ ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಮುಖ್ಯವಾಗಿದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸ್ವಚ್ಛತೆ ಕಾಪಾಡುವುದು ಬಹಳ ಮುಖ್ಯ. ಇದನ್ನು ಸಮರ್ಪಕವಾಗಿ ನಿಭಾಯಿಸುತ್ತಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯ ಎಂದರು. ಸರ್ಕಾರಗಳು ಕರೊನಾ ಸಂದರ್ಭದಲ್ಲಿ ಸಂಕಷ್ಟ ಎದುರಿಸುತ್ತಿರುವ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆಗೆ ಚಾಲನೆ ನೀಡಿದೆ. ತಾಲೂಕಿನಲ್ಲಿ ಪೌರಕಾರ್ಮಿಕರಿಗೆ ದಿನಸಿಕಿಟ್ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಎರಡನೇ ಬಾರಿ ನೆರವು:ಕರೊನಾ ಮೊದಲ ಅಲೆ ಸಂದರ್ಭದಲ್ಲೂ ಎಂಟಿಬಿ ಚಾರಿಟಬಲ್ ಟ್ರಸ್ಟ್ನಿಂದ ಬಿಜೆಪಿ ಮುಖಂಡರ ಸಹಕಾರದೊಂದಿಗೆ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಲಾಗಿತ್ತು. ಎರಡನೇ ಅಲೆ ವೇಳೆಯೂ ಈ ಕಾರ್ಯಕ್ರಮ ಮುಂದುವರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
11,800 ಉಚಿತ ವಾಕ್ಸಿನ್: ಎಂಟಿಬಿ ಚಾರಿಟಬಲ್ ಟ್ರಸ್ಟ್ನಿಂದ ಹೊಸಕೋಟೆ ತಾಲೂಕಿನ ಎಲ್ಲ ಪಂಚಾಯಿತಿ ವ್ಯಾಪ್ತಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಇದುವರೆಗೆ 11,800 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ಇದನ್ನು ಮುಂದುವರೆಸಲಾಗುತ್ತಿದ್ದು ಕರೊನಾ ಸೋಂಕು ನಿಯಂತ್ರಣಕ್ಕೆ ಅವಿತರ ಶ್ರಮಿಸಲಾಗುತ್ತಿದೆ ಎಂದು ಎಂಟಿಬಿ ಪುನರುಚ್ಚರಿಸಿದರು. ರಾಜ್ಯದಲ್ಲಿ ತ್ವರಿತವಾಗಿ ಎಲ್ಲರಿಗೂ ಲಸಿಕೆ ನೀಡಲು ಸರ್ಕಾರ ಎಲ್ಲ ಕ್ರಮಕೈಗೊಂಡಿದೆ. ಇದು ಸಮರೋಪಾದಿಯಲ್ಲಿ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲರಿಗೂ ವಾಕ್ಸಿನ್ ದೊರೆಯಲಿದೆ ಈ ಬಗ್ಗೆ ಯಾರೂ ಆತಂಕಪಡಬೇಡಿ ಜತೆಗೆ ವದಂತಿಗಳಿಗೆ ಕಿವಿಕೊಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.