ಬೆಳಗಾವಿ: ಆರ್ಸಿಯು ಅಭಿವೃದ್ಧಿಗೆ ಅಗತ್ಯವಿರುವ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿಯೇ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ 2ನೇ ದೊಡ್ಡ ವಿವಿಯಾಗಿದೆ. ವಿವಿ ವ್ಯಾಪ್ತಿಯಲ್ಲಿ 350 ಪದವಿ ಕಾಲೇಜುಗಳಿದ್ದು, 1.08 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಅಲ್ಲದೆ ಅಭಿವೃದ್ಧಿಗೆ ಅಗತ್ಯವಿರುವ ಭೂಮಿ ಸಿಗದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಸಮಸ್ಯೆ ಎದುರಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ ಎಂದು ದೂರಿದರು.
ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ, ಕ್ರೀಡಾ ವಿಭಾಗ, ಮೈದಾನ, ಕ್ಯಾಂಟೀನ್, ಸಾರಿಗೆ ಸೌಲಭ್ಯ ಇಲ್ಲ. 3 ಸಾವಿರ ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದು ವಸತಿ ನಿಲಯಗಳ ಸೌಲಭ್ಯ ಇಲ್ಲ. ನಗರದಿಂದ 20 ಕಿಮೀ ದೂರದಲ್ಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೆ ಸಂಚಾರ ಮಾಡಲು ಸಮಸ್ಯೆಯಾಗುತ್ತಿದೆ. ಹಾಗಾಗಿ ಸರ್ಕಾರ ತಕ್ಷಣ ಅಭಿವೃದ್ಧಿಗೆ ಅಗತ್ಯವಿರುವ ಭೂಮಿ ಮಂಜೂರು ಮಾಡಲು ಕ್ರಮ ವಹಿಸಬೇಕು ಎಂದು ಮನವಿ ಮೂಲಕ ಸಚಿವರನ್ನು ಕೋರಿದರು.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ, ಬೆಂಡಿಗೇರಿ ಹಾಗೂ ಸುತ್ತಮುತ್ತಲಿನ ಗ್ರಾಮದ ಮುಖಂಡರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಬೇಕಾಗಿರುವ ಭೂಮಿಯನ್ನು ಸ್ವ ಇಚ್ಛೆಯಿಂದ ನೀಡಿ ವಿವಿ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಎಬಿವಿಪಿ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿ ಕುಮಾರ, ಪ್ರಾಂತ್ಯ ಉಪಾಧ್ಯಕ್ಷ ಡಾ.ಆನಂದ ಹೊಸೂರ, ಪ್ರಾಂತ ವಿವಿ ಪ್ರಮುಖ ಪ್ರಕಾಶ ಕಟ್ಟಿಮನಿ, ಶಂಕರಗೌಡ ಪಾಟೀಲ, ರಾಜೇಂದ್ರ ಅಂಕಲಗಿ ಇತರರು ಇದ್ದರು.