ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಬೆಳಗಲಿಯಲ್ಲಿ ಒಂದು ದಿನ ಹಾಗೂ ಮುಧೋಳ ಪಟ್ಟಣದಲ್ಲಿ ಎರಡು ದಿನ ರನ್ನ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಸಿದ್ಧತೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ರನ್ನ ವೈಭವ ಕಾರ್ಯಕ್ರಮ ಸಿದ್ಧತೆ ಕುರಿತು ವಿವಿಧ ಸಮಿತಿ ರಚನೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರನ್ನ ವೈಭವ ಕಾರ್ಯಕ್ರಮ ಯಶಸ್ವಿ ಹಾಗೂ ಅದ್ದೂರಿಯಾಗಿ ನಡೆಸಲು ಒಟ್ಟು 24 ಸಮಿತಿ ರಚಿಸಲಾಗಿದ್ದು, ಪ್ರತಿಯೊಂದು ಸಮಿತಿಯವರು ತಮ್ಮ ಹಂತದಲ್ಲಿ ಸಭೆಯನ್ನು ಕರೆದು ಇಂದಿನಿಂದಲೇ ತಮಗೆ ವಹಿಸಿದ ಕೆಲಸವನ್ನು ಪ್ರಾರಂಭಿಸಬೇಕು ಎಂದರು.
ಸಲಹಾ ಸಮಿತಿ, ಸ್ವಾಗತ ಮತ್ತು ಶಿಷ್ಠಾಚಾರ ಸಮಿತಿ, ಕಾರ್ಯಕಾರಿ ಸಮಿತಿ, ಹಣಕಾಸು ಸಮಿತಿ, ಸಾರಿಗೆ, ವಸತಿ, ಆಹಾರ, ಪ್ರಚಾರ, ಆಹ್ವಾನ ಪತ್ರಿಕೆ, ಕರಪತ್ರ, ನೆನಪಿನ ಕಾಣಿಕೆ, ಪ್ರಮಾಣ ಪತ್ರ ಹಾಗೂ ಬ್ಯಾನರ್, ಮೂಲಭೂತ ಸೌಲಭ್ಯ, ಆರೋಗ್ಯ ಮತ್ತು ನೈರ್ಮಲ್ಯ, ಕಾನೂನು ಸುವ್ಯವಸ್ಥೆ, ವೇದಿಕೆ, ಕ್ರೀಡಾ, ಜಾನಪದ ವಾಹಿಸಿ ಮೆರವಣಿಗೆ ಸಮಿತಿ, ರನ್ನ ರಥಯಾತ್ರೆ, ಕಲಾವಿದರ ಆಯ್ಕೆ ಸಮಿತಿ, ಸಾಕ್ಷೃ ಚಿತ್ರ, ವಸ್ತು ಪ್ರದರ್ಶನ ಮಳಿಗೆ ಸೇರಿದಂತೆ ಒಟ್ಟು 24 ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಈ ಮೂರು ದಿನಗಳ ಕಾಲ ಜರುಗುವ ಉತ್ಸವದಲ್ಲಿ ಕವಿ ಚರ್ಕವರ್ತಿ ರನ್ನನ ಸಾಹಿತ್ಯ ಕುರಿತಂತೆ ವಿಚಾರಗೋಷ್ಠಿ, ಕವಿಗೋಷ್ಠಿ ಹಮ್ಮಿಕೊಳ್ಳಲಾಗುತ್ತಿದೆ. ರಾಷ್ಟ್ರಮಟ್ಟದ ಹಾಗೂ ರಾಜ್ಯಮಟ್ಟದ ಶ್ರೇಷ್ಠ ಕಲಾವಿದರನ್ನು ಸಂಪರ್ಕ ಮಾಡಿ ಪೈನಲ್ ಮಾಡಲು ಕಮಿಟಿಗಳಿಗೆ ಸೂಚಿಸಿದರು. ಕಾರ್ಯಕ್ರಮ ಆಯೋಜನೆಗೆ ಸಂಪನ್ಮೂಲ ಸಂಗ್ರಹಣೆ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂಪನ್ಮೂಲ ಕೃಡೀಕರಿಸಲು ಮುಂದಾಗಬೇಕು ಎಂದು ಹೇಳಿದರು.
ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ವಿವಿಧ ಸಮಿತಿಗಳ ರಚಿಸಿದ ಮಾಹಿತಿಯನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿ.ಪಂ ಸಿಇಒ ಶಶಿಧರ ಕುರೇರ, ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್ ಪಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.