More

    ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು

    ಗದಗ: ವಾಸ್ತವ ಅಂಶಗಳನ್ನು ಆಧರಿಸಿ ಜಿಲ್ಲೆಯ ಅಭಿವೃದ್ಧಿ ಚಿತ್ರಣ ಹೇಗಿರಬೇಕು ಎಂಬುದರ ಕುರಿತು ಜಿಲ್ಲಾ ಮಾನವ ಅಭಿವೃದ್ಧಿ ಸೂಚ್ಯಂಕ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ಮಾಹಿತಿ ಸಂಗ್ರಹಿಸಿ ಜಿಲ್ಲಾ ಸಮಗ್ರ ಅಭಿವೃದ್ಧಿ ಯೋಜನೆ ಸಿದ್ಧಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು.

    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಗ್ರ ಜಿಲ್ಲಾ ಅಭಿವೃದ್ಧಿ ಯೋಜನೆ ತಯಾರಿಕೆ ಕುರಿತು ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪ್ರತಿಯೊಂದು ಇಲಾಖೆ ತನ್ನದೇ ಆದ ದೂರದೃಷ್ಟಿ ಹೊಂದಿರಬೇಕು. ಇದರಿಂದ ಸಂಪನ್ಮೂಲಗಳ ಸದ್ಬಳಕೆ ಹಾಗೂ ನಿಶ್ಚಿತ ಗುರಿ ತಲುಪುವುದಕ್ಕೆ ಸಾಧ್ಯವಾಗುತ್ತದೆ ಎಂದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ವಿಭಾಗವಾರು ಕಾರ್ಯ ತಂಡಗಳನ್ನು ರಚಿಸಿ ಆರ್​ಡಿಪಿಆರ್ ಇಂಜಿನಿಯರ್, ವಿದ್ಯಾರ್ಥಿಗಳು, ಸ್ವಸಹಾಯ ಗುಂಪುಗಳು, ವಿವಿಧ ಇಲಾಖೆಗಳ ಅಧಿಕಾರಿಗಳ ಸಹಯೋಗದೊಂದಿಗೆ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

    ಜಿಲ್ಲೆಯ ಕಲೆ, ಸಂಸ್ಕೃತಿ, ಶಿಕ್ಷಣ ಮಹಿಳಾ ಸಬಲೀಕರಣ, ಆರೋಗ್ಯ, ಮೂಲ ಸೌಕರ್ಯಗಳನ್ನು ಒಳಗೊಂಡಂತೆ ವಿವಿಧ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದವರಿಂದ ಸಮಸ್ಯೆಗಳಿಗೆ ಪರಿಹಾರವನ್ನು ಸಹ ಸಂಗ್ರಹಿಸಬಹುದಾಗಿದೆ. ಬರೀ ಅಂಕಿ-ಅಂಶಗಳ ಅಭಿವೃದ್ಧಿ ಅಲ್ಲದೇ ಜನರ ನಿಜವಾದ ಸಮಸ್ಯೆಗಳಿಗೆ ಸ್ಪಂದಿಸುವುದು ಸಮಗ್ರ ಜಿಲ್ಲಾ ಅಭಿವೃದ್ಧಿ ಯೋಜನೆಯ ಉದ್ದೇಶವಾಗಿದೆ ಎಂದರು.

    ಜಿಪಂ ಸಿಇಒ ಡಾ.ಆನಂದ ಕೆ. ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ಮುಂಬರುವ ವರ್ಷಗಳಲ್ಲಿ ಅಗತ್ಯಗಳನ್ನು ಆಧರಿಸಿ ಹೇಗಿರಬೇಕು ಎಂಬುದರ ಕುರಿತು ದೂರದೃಷ್ಟಿ ಹೊಂದಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮಗಳಿಗೆ ನಿಯೋಜಿತ ಕಾರ್ಯ ತಂಡಗಳು ತೆರಳಿ ಮಾಹಿತಿ ಸಂಗ್ರಹಿಸಿ ಮೇ ಅಂತ್ಯದೊಳಗೆ ಗದಗ ಜಿಲ್ಲಾ ಸಮಗ್ರ ಅಭಿವೃದ್ಧಿ ಯೋಜನೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

    ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಕೇರಳದ ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯಾನಂದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಪ್ರಭಾರ ಕುಲಪತಿ ಸುರೇಶ ನಾಡಗೌಡರ, ಸಂಪನ್ಮೂಲ ವ್ಯಕ್ತಿ ಗಣೇಶ ಪ್ರಸಾದ, ಮಾಜಿ ಶಾಸಕ ಡಿ.ಆರ್.ಪಾಟೀಲ, ಜಿಪಂ ಉಪಕಾರ್ಯದರ್ಶಿ ಬಿ. ಕಲ್ಲೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

    ಸಂಪನ್ಮೂಲಗಳ ಕ್ರೋಡೀಕರಣ: ಅಬ್ದುಲ್ ನಜೀರ್​ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಸಂಸ್ಥೆಯ ನಿರ್ದೇಶಕಿ ಶಿಲ್ಪಾ ನಾಗ್ ಮಾತನಾಡಿ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಯೋಜನಾ ಸಂಪನ್ಮೂಲಗಳು ಹಾಗೂ ಅದರ ಸದ್ಬಳಕೆ ಮುಖ್ಯ ಎಂದರು. ಜಿಲ್ಲೆಯಲ್ಲಿನ ವಿವಿಧ ಇಲಾಖೆಗಳ ಅನುದಾನ ಹಾಗೂ ಸಂಪನ್ಮೂಲಗಳನ್ನು ಕ್ರೋಡೀಕರಿಸಲಾಗುವುದು. ಗ್ರಾಮಸಭೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಸಮಸ್ಯೆಗಳ ಕುರಿತು ವಿಶೇಷವಾಗಿ ರ್ಚಚಿಸಲಾಗುವುದು. ಆಯಾ ಇಲಾಖೆಯಿಂದ ಪ್ರಾಥಮಿಕ ಅಂಶಗಳನ್ನು ಸಂಗ್ರಹಿಸುವುದು ಮತ್ತು ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಸಂಗ್ರಹಿಸಿ ಸಮಗ್ರ ಜಿಲ್ಲಾ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಮುನ್ನೋಟ ತಯಾರಿಕೆ ಬಹುಮುಖ್ಯವಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts