ಹಿರಿಯೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ದೊರೆತರೆ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ.
ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಪಿಯು ಕಾಲೇಜಿನ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2023-24 ನೇ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮಗಳ
ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಚಟುವಟಿಕೆ ಜತೆಗೆ ಪುಸ್ತಕ, ದಿನಪತ್ರಿಕೆ ಓದುವುದರಿಂದ ಜ್ಞಾನಾರ್ಜನೆ ಪಡೆಯಬಹುದು ಎಂದರು.
ಹೆಚ್ಚಿನ ಸಮಯವನ್ನು ಕಲಿಕೆಯಲ್ಲಿ ತೊಡಗಿಸಿಕೊಂಡರೆ ಅಂದುಕೊಂಡ ಗುರಿಯನ್ನು ವಿದ್ಯಾರ್ಥಿಗಳು ಸುಲಭವಾಗಿ ತಲುಪಬಹುದು. ಕಾಲೇಜಿನ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಕೆಪಿಸಿಸಿ ರಾಜ್ಯ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಪದವಿ ಪಡೆಯುವುದೇ ಮುಖ್ಯ ಗುರಿಯನ್ನಾಗಿಸಿಕೊಳ್ಳಬಾರದು.
ಓದಿನ ಜತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕೌಶಲ ಬೆಳೆಸಿಕೊಳ್ಳಬೇಕು. ಗುರು-ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಉತ್ತಮ ಭವಿಷ್ಯ ನಿಮ್ಮದಾಗುತ್ತದೆ ಎಂದರು.
ಕಾಲೇಜಿನ ಮುಖ್ಯಸ್ಥ ಬಿ.ಪಿ.ತಿಪ್ಪೇಸ್ವಾಮಿ, ವಿದ್ಯಾಸಂಸ್ಥೆ ಕಾರ್ಯದರ್ಶಿ ಜಿ.ಶಾಂತಮ್ಮ, ನಗರಸಭೆ ಸದಸ್ಯರಾದ ಗುಂಡೇಶ್ ಕುಮಾರ್,
ಜಿ.ಎಸ್.ತಿಪ್ಪೇಸ್ವಾಮಿ, ಚಿತ್ರಜಿತ್ ಯಾದವ್, ಪಿಯು ಉಪನಿರ್ದೇಶಕ ಎನ್.ರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು,
ಅಶೋಕ್ ಗಿಡ್ಡೋಬನಹಳ್ಳಿ, ಪ್ರಸನ್ನ, ಮಲ್ಲಿಗೆಮ್ಮ, ಟಿ.ಧ್ರುವಕುಮಾರ್ ಇತರರಿದ್ದರು.