ಬೆಂಗಳೂರು: ಕೇಂದ್ರ ಸರ್ಕಾರದ ಅನ್ಲಾಕ್- 3 ಮಾರ್ಗಸೂಚಿ ಅನ್ವಯ ಸಾಮಾಜಿಕ ಅಥವಾ ಧಾರ್ವಿುಕ ಆಚರಣೆಗಳನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.
ಕರೊನಾ ಹಿನ್ನೆಲೆಯಲ್ಲಿ ಆ.21 ಮತ್ತು ಆ.22ರಂದು ನಡೆಯುವ ಗೌರಿ- ಗಣೇಶ ಹಬ್ಬವನ್ನು ಮನೆಯಲ್ಲೇ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಬೇಕು. ರಸ್ತೆ, ವಠಾರ ಮುಂತಾದೆಡೆ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಹೆಚ್ಚು ಜನ ಸೇರುತ್ತಾರೆ. ಆದ್ದರಿಂದ, ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಮೂರ್ತಿ ಪ್ರತಿಷ್ಠಾಪನೆ ಮಾಡಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಮಾರಾಟಕ್ಕೆ ನಿರ್ಬಂಧವಿಲ್ಲ: ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿರ್ಬಂಧಿಸಿದ್ದರೂ ಮನೆಗಳಲ್ಲಿ ಗಣೇಶನನ್ನು ಕೂರಿಸಿ ಪೂಜಿಸಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಪರಿಸರಸ್ನೇಹಿ, ಚಿಕ್ಕ ಗೌರಿ ಮತ್ತು ಗಣೇಶ ಮೂರ್ತಿಗಳನ್ನು ಮಾರಾಟ ಮಾಡಬಹುದು. ಆದರೆ, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ಮಾರಾಟಕ್ಕೆ ನಿಷೇಧವಿದೆ. ಹಬ್ಬಕ್ಕೆ ಬೇಕಾದ ಇತರ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವ ಮೂಲಕ ವಹಿವಾಟು ನಡೆಸಬಹುದು ಎಂದು ತಿಳಿಸಿದ್ದಾರೆ.
ವಿಸರ್ಜನೆಗೆ ವಿಶೇಷ ವ್ಯವಸ್ಥೆಯಿಲ್ಲ: ಪ್ರತಿ ವರ್ಷ ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿ ವಿಸರ್ಜನೆಗೆ ಮೊಬೈಲ್ ಟ್ಯಾಂಕರ್ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷ ತಮ್ಮ ಮನೆಗಳಲ್ಲಿಯೇ ಬಕೆಟ್ನಲ್ಲಿ ವಿಸರ್ಜನೆ ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಕೂರಿಸಲು ಅವಕಾಶವಿಲ್ಲದ ಕಾರಣ ಕೆರೆ, ಕಲ್ಯಾಣಿ, ಟ್ಯಾಂಕ್ಗಳಲ್ಲಿ ಮೂರ್ತಿ ವಿಸರ್ಜನೆಗೆ ಅನುಮತಿ ನೀಡುವುದಿಲ್ಲ ಎಂದು ಆಯುಕ್ತರು ಹೇಳಿದ್ದಾರೆ.
ಸಾಮೂಹಿಕ ಪ್ರಾರ್ಥನೆಗಿಲ್ಲ ಅವಕಾಶ
ನಗರದಲ್ಲಿ ಬಕ್ರೀದ್ ಹಬ್ಬದಂದು ಸಾಮೂಹಿಕ ಪ್ರಾರ್ಥನೆ ಮಾಡದಂತೆ ಈಗಾಗಲೇ ವಕ್ಪ್ ಬೋರ್ಡ್ ನಿಷೇಧ ವಿಧಿಸಿದೆ. ಮನೆಗಳಲ್ಲಿಯೂ ಗುಂಪು ಸೇರದೆ, ಆಯಾ ಕುಟುಂಬ ಸದಸ್ಯರು ಪ್ರಾರ್ಥನೆ ಮಾಡಬೇಕು. ಹಬ್ಬ ಆಚರಣೆಗೆ ಮೇಕೆ, ಕುರಿ ಸೇರಿ ಯಾವುದೇ ಪ್ರಾಣಿವಧೆ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.
ಕಾಂಗ್ರೆಸ್ ಸಭೆಯಲ್ಲಿ ಜಟಾಪಟಿ: ಹಿರಿಯ ನಾಯಕರ ವಿರುದ್ಧ ಯುವ ಸಂಸದರ ಆಕ್ರೋಶ