ಗಂಗಾವತಿ: ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾಗಿರುವ ವ್ಯಾಪಾರಿಗಳು ಮತ್ತು ಬಡ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಸಿಪಿಐ ತಾಲೂಕು ಸಮಿತಿಯಿಂದ ನಗರದಲ್ಲಿ ಶಾಸಕರ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಸಮಿತಿ ತಾಲೂಕು ಕಾರ್ಯದರ್ಶಿ ಎ.ಹುಲುಗಪ್ಪ ಮಾತನಾಡಿ, ಕೋವಿಡ್ ಮುಂಜಾಗ್ರತಾ ಕ್ರಮಗಳಿಂದಾಗಿ ಬಡ ಕುಟುಂಬಗಳು ಸಂಕಷ್ಟಕ್ಕೊಳಗಾಗಿವೆ. ಸಣ್ಣ ಪ್ರಮಾಣದ ವ್ಯಾಪಾರಿಗಳು ದುಡಿಮೆ ಕಳೆದುಕೊಂಡಿದ್ದಾರೆ. ಸರ್ಕಾರ ಘೋಷಿಸಿರುವ ಪ್ಯಾಕೇಜ್ನಿಂದ ಬಹುತೇಕ ಕುಟುಂಬಗಳಿಗೆ ಅನುಕೂಲವಿಲ್ಲ. ಕರೊನಾ ನಿಯಂತ್ರಣಕ್ಕೆ ಬರುವವರೆಗೆ ಪ್ರತಿ ಕುಟುಂಬಕ್ಕೆ ಮಾಸಿಕ 10 ಸಾವಿರ ರೂ. ನೆರವು, ಸಣ್ಣ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ಘೋಷಿಸಬೇಕು. ಕೃಷಿ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಉದ್ಯೋಗ ಖಾತರಿ ಯೋಜನೆ ಕೂಲಿ ಹೆಚ್ಚಿಸಬೇಕು. ಅಸಂಘಟಿತ ಕಾರ್ಮಿಕರಿಗೆ 10 ಸಾವಿರ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಪದಾಧಿಕಾರಿಗಳಾದ ಎ.ಎಲ್. ತಿಮ್ಮಣ್ಣ, ಎಸ್.ಕನಕರಾಯ, ಮುತ್ತಣ್ಣ, ಹನುಮೇಶ ಕರೆಕುರಿ, ಯಮನೂರಿ ಮತ್ತು ಇತರರಿದ್ದರು.