ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊವಿಡ್-19 ನಿಯಂತ್ರಣವಾಗುತ್ತಿದೆ. ಚೇತರಿಕೆ ಪ್ರಮಾಣ ಹೆಚ್ಚಾಗಿದೆ. ಈಗ ಇದೇ ವಿಚಾರಕ್ಕೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಕೊವಿಡ್-19 ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಲಾಗುತ್ತಿದೆ. ಆದರೆ ಈಗ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇದರ ಸಂಪೂರ್ಣ ಕ್ರೆಡಿಟ್ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಗೌತಮ್ ಗಂಭೀರ್ ಆರೋಪಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರನ್ನು ತುಘಲಕ್ ಎಂದು ಕರೆದಿರುವ ಗೌತಮ್ ಗಂಭೀರ್, ದೆಹಲಿಯಲ್ಲಿ ಕೊವಿಡ್ ಪರಿಸ್ಥಿತಿ ಸುಧಾರಿಸುತ್ತಿದೆ. ತುಘಲಕ್ ಅರವಿಂದ್ ಕೇಜ್ರಿವಾಲ್ ಹಾಗೂ ಆಪ್ ಪಕ್ಷ ಪ್ರತಿ ತಾಸಿಗೊಮ್ಮೆ ದೆಹಲಿಯ ಕೊವಿಡ್-19 ಪರಿಸ್ಥಿತಿ ಬಗ್ಗೆ ವಿವರಿಸಿ ಟ್ವೀಟ್ ಮಾಡುತ್ತಿದೆ. ಈ ಮೂಲಕ ಎಲ್ಲವನ್ನೂ ತಾವೇ ನಿಭಾಯಿಸುತ್ತಿದ್ದೇವೆ ಎಂದು ಮನ್ನಣೆ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸ್ವಲ್ಪ ದಿನಗಳ ಹಿಂದೆ ಉಪಮುಖ್ಯಮಂತ್ರಿಯವರು ದೆಹಲಿಯಲ್ಲಿ ಜುಲೈ ಅಂತ್ಯದ ವೇಳೆಗೆ ಕೊವಿಡ್-19 ಸೋಂಕಿತರ ಸಂಖ್ಯೆ 5.5 ಲಕ್ಷಕ್ಕೆ ಏರುತ್ತದೆ ಎಂದು ಯಾವ ಕಾರಣಕ್ಕೆ ಹೇಳಿದ್ದರು? ಕೇಂದ್ರ ಸಹಾಯಕ್ಕೆ ಬರಲಿ ಎಂದೇ ಹೀಗೆ ಹೇಳಿಕೆ ನೀಡಿದ್ದರಾ? ಎಂದು ಗಂಭೀರ್ ಪ್ರಶ್ನಿಸಿದ್ದಾರೆ.
ಇಂದು ಟ್ವೀಟ್ ಮಾಡಿದ್ದ ಆಪ್, ದೆಹಲಿಯಲ್ಲಿ ಕರೊನಾ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಹೋರಾಟ ಮಾಡಲಾಗುತ್ತಿದೆ. ಜನರೂ ಇದಕ್ಕೆ ಸಹಕಾರ ನೀಡುತ್ತಿದ್ದಾರೆ. ಇದುವರೆಗೆ ಒಟ್ಟು 84, 694 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿತ್ತು.
ದೆಹಲಿಯಲ್ಲಿ ಒಟ್ಟು 1,09,140 ಮಂದಿ ಕರೊನಾ ಸೋಂಕಿತರು ಇದ್ದು, 3,300 ಜನರು ಸಾವನ್ನಪ್ಪಿದ್ದಾರೆ. (ಏಜೆನ್ಸೀಸ್)
‘ನನಗೆ ಕರೊನಾ ಲಕ್ಷಣಗಳಿಲ್ಲ…ಕ್ಷೇಮವಾಗಿದ್ದೇನೆ…’: ಸಚಿವ ಸಿ.ಟಿ.ರವಿ ಟ್ವೀಟ್