ಉಡುಪಿ: ಜನಪ್ರತಿನಿಧಿಗಳಿಗೆ ಮತ ನೀಡುವಾಗ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ಕೊಡಬೇಕು. ಕಳೆದ ನಾಲ್ಕು ದಶಕಗಳಿಂದ ಕರಾವಳಿಯ ಅಭಿವೃದ್ಧಿಗಾಗಿ ನನ್ನ ಕಾರ್ಯವ್ಯಾಪ್ತಿಯಲ್ಲಿ, ಕಾನೂನಿನ ಚೌಕಟ್ಟಿನಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದೇನೆ. ಉಡುಪಿ ಪ್ರಜ್ಞಾವಂತ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆಂಬುದು ಸ್ಪಷ್ಟವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಕರ್ತವ್ಯ ನಿಭಾಯಿಸಲು ಮತ್ತೊಮ್ಮೆ ಅವಕಾಶ ಒದಗಿಸಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಹೇಳಿದರು.
ಉಡುಪಿ ವಿವಿಧ ಕಡೆಗಳಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು. ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಜನಪ್ರತಿನಿಧಿಯ ಕರ್ತವ್ಯ. ಕ್ಷೇತ್ರದಲ್ಲಿ ಕೆಲಸಗಳನ್ನು ಮಾಡದಿದ್ದಾಗ ಪ್ರಶ್ನಿಸುವ ಹಕ್ಕು ಮತದಾರರಿಗಿರುತ್ತದೆ. ಸಮರ್ಥರಾದವರನ್ನು ಆಯ್ಕೆ ಮಾಡುವುದರಿಂದ ಕ್ಷೇತ್ರ ಅಭಿವೃದ್ಧಿ ಸಾಧ್ಯ. ಚುನಾವಣೆಯಲ್ಲಿ ಗೆದ್ದು ಮತ್ತೆ ಆ ಕ್ಷೇತ್ರಕ್ಕೆ ಕಾಲಿಡದಿದ್ದರೆ ಜನರು ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಹೇಳಿಕೊಳ್ಳುವ ಅಭಿವೃದ್ಧಿಯ ಕೆಲಸಗಳು ಇಲ್ಲದಿದ್ದಾಗ ಬೇರೆಯವರ ಹೆಸರಿನಲ್ಲಿ ಮತ ಕೇಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಸರಕಾರ ನೀಡಿರುವ ಐದು ಗ್ಯಾರೆಂಟಿ ಯೋಜನೆಗಳ ಬಗ್ಗೆ ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಜನಸಾಮಾನ್ಯರ ಬದುಕಿಗೆ ಸ್ಪಂದಿಸಿ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಒದಗಿದುವುದು ಕಾಂಗ್ರೆಸ್ನ ಗುರಿಯಾಗಿದೆ ಎಂದು ಹೆಗ್ಡೆ ಹೇಳಿದರು.
ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಮಾತನಾಡಿ, ಜಯಪ್ರಕಾಶ್ ಹೆಗ್ಡೆ ಸೋಲು-&ಗೆಲುವು ಲೆಕ್ಕಿಸದೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದವರು. ಈ ಕಾರಣಕ್ಕಾಗಿ ಚಿಕ್ಕಮಗಳೂರು ಮತ್ತು ಉಡುಪಿ ಕ್ಷೇತ್ರದ ಜನ ಅವರ ಮೇಲೆ ಅಪಾರ ಭರವಸೆ ಇಟ್ಟಿದ್ದಾರೆ. ಮತದಾನ ಮಾಡುವಾಗ ಹೆಗ್ಡೆ ಅವರ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿಕೊಳ್ಳಬೇಕಾದ ಅಗತ್ಯವಿದೆ. ಕರಾವಳಿಯ ಮೀನುಗಾರರ ಬದುಕಿಗೆ ಸದಾ ಸ್ಪಂದಿಸುತ್ತಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ. ಗೂರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮೊದಲಾದವರು ಹಾಜರಿದ್ದರು.