ಹನೂರು: ಗ್ರಾಮದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಹಾಗೂ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆಯಲು ಪ್ರತಿಯೊಬ್ಬರೂ ಸಂಘಟಿತರಾಗಬೇಕಿದೆ ಎಂದು ತಾಲೂಕು ರೈತ ಸಂಘದ ಅಮ್ಜಾದ್ ಖಾನ್ ತಿಳಿಸಿದರು.
ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತೋಣಿಯರ್ ಕೋವಿಲ್ ಗ್ರಾಮದಲ್ಲಿ ಮಂಗಳವಾರ ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಗಳಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆ ಇದೆ. ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ದೊರಕಿಸಿಕೊಡಲು ಮೀನಮೇಷ ಎಣಿಸುತ್ತಿದ್ದಾರೆ. ಹಾಗಾಗಿ ಇದರಿಂದ ಮುಕ್ತಿ ಹೊಂದಬೇಕಾದರೆ ಪ್ರತಿಯೊಬ್ಬರೂ ಸಂಘಟಿತರಾಗಬೇಕು. ಈ ದಿಸೆಯಲ್ಲಿ ರೈತ ಸಂಘವನ್ನು ಉದ್ಘಾಟಿಸಲಾಗುತ್ತಿದೆ. ಈ ಮೂಲಕ ಪರಸ್ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದರ ಜತೆಗೆ ಸಂಘದ ಅಭಿವೃದ್ಧಿಗೆ ಹಾಗೂ ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.
ಗ್ರಾಮ ಘಟಕದ ಅಧ್ಯಕ್ಷರಾಗಿ ಪೀಟರ್ ಪೆರಿಯನಾಯಗಂ, ಉಪಾಧ್ಯಕ್ಷರಾಗಿ ಧರ್ಮರಾಜ್, ಪದಾಧಿಕಾರಿಗಳಾಗಿ ಅಂತೋಣಿಯಮ್ಮ, ಲಿಲ್ಲಿ, ಪುಷ್ಪಾ, ಪ್ರೇಮಾ, ಮೊದಲೈಯಮ್ಮ ಆಯ್ಕೆಯಾದರು. ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ತಾಲೂಕು ಗೌರವಾಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ಪಳನಿಸ್ವಾಮಿ, ಗ್ರಾಮ ಘಟಕದ ಅಧ್ಯಕ್ಷ ಸೂಸೈ ಮಾಣಿಕ್ಯಂ, ರೈತ ಮುಖಂಡರಾದ ಅರ್ಪುದರಾಜ್, ಅಂತೋಣಿಸ್ವಾಮಿ, ಸಂತಿಯಾಗು, ಸೂಸೈಯಮ್ಮ ಇನ್ನಿತರರು ಇದ್ದರು.