ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನ ಪಡೆಯುವ ವಿಚಾರವಾಗಿ ಡೆಮಾಕ್ರಟಿಕ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ 400 ಸ್ಥಾನ ಪಡೆದರೆ ಅದಕ್ಕೆ ಇಂಡಿಯಾ ಮೈತ್ರಿಕೂಟ ನೈತಿಕ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕೇಂದ್ರ ಸರ್ಕಾರ ದಮ್ಮು, ತಾಕತ್ ತೋರಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಇಂಡಿಯಾ ಬ್ಲಾಕ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವ ವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸೋತರೆ ಕಾಂಗ್ರೆಸ್ ಪಕ್ಷವೇ ಹೊಣೆ ಹೊರಬೇಕಾಗುತ್ತದೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಜಮ್ಮುವಿನ ಉಪನಗರವಾದ ಗರ್ಜಾಲ್ನಲ್ಲಿ ನಡೆದ ಸಭೆಯಲ್ಲಿ ಆಜಾದ್ ಮಾತನಾಡಿದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಎಷ್ಟು ಸೀಟು ಗೆಲ್ಲುತ್ತದೆ ಎಂದು ಹೇಳಲು ನಾನೇನು ಜ್ಯೋತಿಷ್ಯನಲ್ಲ. ಬಿಜೆಪಿ 400 ಸೀಟು ದಾಟುತ್ತದೆಯೇ ಎಂದು ಹೇಳಲು ಸಾಧ್ಯವಿಲ್ಲ. ಒಂದು ವೇಳೆ ಹೀಗಾದರೆ ಪ್ರತಿಪಕ್ಷಗಳು ಹೊಣೆ ಹೊರಬೇಕಾಗುತ್ತದೆ ಎಂದು ಆಜಾದ್ ಹೇಳಿದ್ದಾರೆ.
ಕಾಂಗ್ರೆಸ್ ಅವರು ಏನು ಬೇಕಾದರೂ ಮಾತನಾಡಲಿ, ಬಿಜೆಪಿಯವರು ಏನಾದರೂ ತಪ್ಪು ಮಾಡಿದರೆ ನಾನು ಮೊದಲು ಟೀಕಿಸುತ್ತೇನೆ ಮತ್ತು ಅದೇ ರೀತಿ ಕಾಂಗ್ರೆಸ್ ಏನಾದರೂ ಸರಿ ಮಾಡುತ್ತಿದ್ದರೆ ನಾನು ಅವರಿಗೆ ಕ್ರೆಡಿಟ್ ನೀಡುತ್ತೇನೆ ಎಂದರು.
ಕಳೆದ ವರ್ಷ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಡೆಮಾಕ್ರಟಿಕ್ ಪ್ರೋಗ್ರೆಸ್ಸಿವ್ ಆಜಾದ್ ಪಕ್ಷವನ್ನು ಸ್ಥಾಪಿಸಿದ್ದರು.
ಕೇಂದ್ರ ಸರ್ಕಾರ ಇತ್ತೀಚೆಗೆ ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹರಾವ್ ಮತ್ತು ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿಗಳನ್ನು ಘೋಷಿಸಿದೆ. ಇಬ್ಬರೂ ಮಹಾನ್ ನಾಯಕರು ಮತ್ತು ರಾಷ್ಟ್ರಕ್ಕಾಗಿ ವಿಶಿಷ್ಟ ಸೇವೆ ಸಲ್ಲಿಸಿದ್ದಾರೆ. ಇಬ್ಬರು ಭಾರತ ರತ್ನ ಪ್ರಶಸ್ತಿಗೆ ಅರ್ಹರು. ಪ್ರಶಸ್ತಿ ಘೋಷಿಸಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು ಎಂದು ಹೇಳಿದರು.