ಕೊಳ್ಳೇಗಾಲ: ಮೈಸೂರು ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆ ಪ್ರತ್ಯೇಕಗೊಂಡು 25 ವರ್ಷ ಕಳೆದಿದ್ದರೂ ಜಿಲ್ಲಾ ಸಹಕಾರ ಬ್ಯಾಂಕ್ ಪ್ರತ್ಯೇಕವಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದಿಯೇ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಪ್ರಶ್ನಿಸಿದರು.
ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ಪ್ರಶ್ನೆಗೆ ಸಹಕಾರ ಸಚಿವ ಕೆ.ರಾಜಣ್ಣ ಹೌದು ಎಂದು ಪ್ರತಿಕ್ರಿಯಿಸಿ ಮಾತನಾಡಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ್ನು ವಿಭಜಿಸಿ ಚಾಮರಾಜನಗರ ಜಿಲ್ಲೆಗೆ ಪ್ರತ್ಯೇಕವಾಗಿ ಹೊಸ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸ್ಥಾಪಿಸಲು ಮೈಸೂರು-ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಸಮಿತಿ ಮತ್ತು ವ್ಯವಸ್ಥಾಪಕರಿಗೆ ನಿರ್ದೇಶನ ನೀಡಲಾಗಿದೆ. ಅಂತೆಯೇ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ 2016ರ ಜ.19ರಂದು ಬೆಂಗಳೂರು ನಬಾರ್ಡ್ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಬ್ಯಾಂಕಿನ ಆಡಿಟ್ ಮಾಡಲಾದ ಆರ್ಥಿಕ ವರದಿ ಹಾಗೂ ಸಬಲತೆ ವರದಿ ಸೇರಿ ಪ್ರಮುಖ ದಾಖಲೆಗಳನ್ನು ಸಲ್ಲಿಸಿ ಚಾಮರಾಜನಗರ ಜಿಲ್ಲೆಗೆ ಪ್ರತ್ಯೇಕವಾದ ಡಿಸಿಸಿ ಬ್ಯಾಂಕ್ ಸ್ಥಾಪಿಸಲು ಅನುಮತಿ ನೀಡುವಂತೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನ ಎನ್.ಐ.ಆರ್.ಬಿ. ನಿರ್ದೇಶಕ ಬ್ಯಾಂಕ್ನ ಆರ್ಥಿಕ ಸ್ಥಿರತೆಯ ಬಗ್ಗೆ ಅಧ್ಯಯನ ಮತ್ತು ಪರಿಶೀಲನೆ ನಡೆಸಿ ಈ ಬಗ್ಗೆ ಸಬಲತೆ ವರದಿಯನ್ನು ಬ್ಯಾಂಕ್ಗೆ 2016 ಡಿ.8ರಲ್ಲಿ ಸಲ್ಲಿಸಿದ್ದಾರೆ ಎಂದು ಹೇಳಿದರು.
ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಬಲತೆ ವರದಿಯನ್ನು ಸಹಕಾರ ಸಂಘಗಳ ನಿಬಂಧಕರಿಗೆ 2016ರ ಡಿ.15ರಂದು ಮುಂದಿನ ಕ್ರಮಕ್ಕಾಗಿ ಸಲ್ಲಿಸಿದ್ದಾರೆ. ಅದರಂತೆ ಸಹಕಾರ ಸಂಘಗಳ ನಿಬಂಧಕ 2016ರ ಡಿ.17 ರಂದು ಬೆಂಗಳೂರಿನ ನಬಾರ್ಡ್ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಿ ಚಾಮರಾಜನಗರ ಜಿಲ್ಲೆಗೆ ಪ್ರತ್ಯೇಕವಾದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸ್ಥಾಪಿಸಲು ಆರ್ಬಿಐಗೆ ಶಿಫಾರಸು ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಸಂಬಂಧ ನಬಾರ್ಡ್ ಮತ್ತು ಆರ್ಬಿಐ ಸಂಸ್ಥೆಗಳು ಅನುಮತಿ ನೀಡುವುದು ಬಾಕಿ ಇದೆ. ಈ ಸಂಸ್ಥೆಗಳು ಚಾಮರಾಜನಗರ ಜಿಲ್ಲೆಗೆ ಪ್ರತ್ಯೇಕವಾದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕನ್ನು ಸ್ಥಾಪಿಸಲು ಅನುಮತಿ ನೀಡಿದ ನಂತರ ಕ್ರಮ ವಹಿಸಲಾಗುವುದು ಎಂದರು.
