More

    ರಾಮಭಕ್ತ ಗಾಂಧಿ ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    ಬೆಂಗಳೂರು: ಎಲ್ಲ ಜಾತಿ, ಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿ ಅವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
    ವಿಧಾನಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
    ಮಹಾತ್ಮಾ ಗಾಂಧೀಜಿಯವರು1948ರ ಜನವರಿ 30 ರಂದು ಗೋಡ್ಸೆ ಅವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು. ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್‌ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದರು.

    ಶ್ರೀರಾಮನ ಮೇಲೆ ಗಾಂಧಿಯವರಿಗೆ ಭಕ್ತಿ

    ಗಾಂಧೀಜಿ ತಮ್ಮ ಕೊನೆಯುಸಿರೆಳೆದಾಗಲೂ ಹೇ ರಾಮ್ ಎಂದು ಉಚ್ಛರಿಸಿದ್ದರು. ಶ್ರೀರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ ರಘುಪತಿ ರಾಘವ ರಾಜಾರಾಮ್ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು. ಶ್ರೀರಾಮ ಪಿತೃವಾಕ್ಯ ಪರಿಪಾಲಕನಾಗಿದ್ದು, ಹದಿನಾಲ್ಕು ವರ್ಷಗಳ ಕಾಲ ವನವಾಸಕ್ಕೆ ತೆರಳಿದ್ದರು. ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧಿಯವರನ್ನು ಮತಾಂಧನಾಗಿದ್ದ ಗೋಡ್ಸೆ ಹತ್ಯೆಗೈಯುತ್ತಾರೆ. ಅವರ ಆದರ್ಶದಲ್ಲಿ ನಡೆದು ನಾವೆಲ್ಲರೂ ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು. ಸತ್ಯ ಅಹಿಂಸೆಯ ಹಾದಿಯನ್ನು ತೋರಿದ ಗಾಂಧೀಜಿಯವರನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ ಎಂದರು.

    ಸಮಾಜದಲ್ಲಿ ಶಾಂತಿ ನೆಲೆಸಬೇಕು

    ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ. ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು ಎಂದು ಸಿದ್ದರಾಮಯ್ಯ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts