ಚಿಕ್ಕಮಗಳೂರು: ತಾಲೂಕಿನಾದ್ಯಂತ ಶುಕ್ರವಾರ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಆವುತಿ, ಇಂದಾವರ, ಜೋಳದಾಳ್, ಬೀಕನಹಳ್ಳಿ, ಮೂಗ್ತಿಹಳ್ಳಿಯಲ್ಲಿ ಸಾಧಾರಣ ಮಳೆ ಸುರಿದಿದೆ. ಆದರೆ ಹಾಂದಿ ಭಾಗದಲ್ಲಿ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.
ಶುಕ್ರವಾರ ಬೆಳಗ್ಗೆನಿಂದಲೂ ಬಿಸಿಲಿನ ವಾತಾವರಣವಿತ್ತು. ಆದರೆ ಮಧ್ಯಾಹ್ನದ ಬಳಿಕ ಏಕಾಏಕಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಮಳೆ ಸುರಿಯಲಾರಂಭಿಸಿತು. ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಸಾಧಾರಣ ಮಳೆ ಸುರಿದಿದೆ. ಆದರೆ ಹಾಂದಿ ಹಾಗೂ ಅಕ್ಕಪಕ್ಕದ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ.