ಗೊರೇಬಾಳ: ಒಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದಲ್ಲಿ ಜ.26, 27 ಮತ್ತು 28 ರಂದು ಸಿದ್ಧಲಿಂಗ ಸ್ವಾಮೀಜಿ ಅವರ ಜನ್ಮದಿನದ ಅಮೃತ ಮಹೋತ್ಸವ, ಚನ್ನಬಸವ ಶಿವಯೋಗಿಗಳ ರಥೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಯದ್ದಲದೊಡ್ಡಿ ಮಹಾಲಿಂಗ ಸ್ವಾಮೀಜಿ ಹೇಳಿದರು.
ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಪ್ರಚಾರ ವಾಹನಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಚನ್ನಬಸವ ಶಿವಯೋಗಿಗಳು ನಡೆದಾಡುವ ದೇವರಾಗಿದ್ದರು. ಸಿದ್ಧಲಿಂಗ ಸ್ವಾಮೀಜಿ ಜನ್ಮದಿನದ ಅಮೃತ ಮಹೋತ್ಸವವನ್ನು ನಾಡಿನ ಹಬ್ಬವಾಗಿ ಆಚರಿಸುವಂತಾಗಬೇಕು ಎಂದರು.
ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಅಮೃತ ಮಹೋತ್ಸವ ಆಚರಣೆ ನಮ್ಮೆಲ್ಲರಿಗೂ ಒದಗಿದ ಪುಣ್ಯದ ಕೆಲಸವಾಗಿದೆ. ಸಂಕಷ್ಟವೆಂದು ಹೇಳಿಕೊಂಡು ಬಂದವರಿಗೆ ಶ್ರೀಮಠ ಪರಿಹಾರ ನೀಡುವ ಸಂಜೀವಿನಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರಚಾರ ಕೈಗೊಂಡು ಕಾರ್ಯಕ್ರಮಗಳಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರನ್ನು ಸೇರಿಸಬೇಕಿದೆ. ಈ ನಿಟ್ಟಿನಲ್ಲಿ ನಾವೆಲ್ಲ ಒಗ್ಗೂಡಿ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು.