ಉಡುಪಿ: ರಾಜ್ಯದ ಎಲ್ಲ ಗ್ರಾಪಂ ಸದಸ್ಯರಿಗೆ ಜ.19ರಿಂದ 26ರವರೆಗೆ 285 ಕೇಂದ್ರಗಳಲ್ಲಿ 5 ದಿನಗಳ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, 900 ಸಂಪನ್ಮೂಲ ವ್ಯಕ್ತಿಗಳನು ನಿಯೋಜಿಸಲಾಗಿದೆ. ಇದಕ್ಕಾಗಿ 23.5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಈಶ್ವರಪ್ಪ ತಿಳಿಸಿದರು.
2ನೇ ಹಂತದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಗ್ರಾಪಂ ಅಧಿಕಾರ ವಿಕೇಂದ್ರೀಕರಣ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
300 ಕೋಟಿ ರೂ. ವೆಚ್ಚದಲ್ಲಿ ಸೋಲಾರ್ ಪ್ಯಾನಲ್: ಗ್ರಾಪಂ ಕರೆಂಟ್ ಬಿಲ್ ಪಾವತಿ ಸಮಸ್ಯೆಯ ನಿವಾರಣೆಗಾಗಿ ರಾಜ್ಯ ಮಟ್ಟದಲ್ಲಿ 300 ಕೋಟಿ ರೂ. ವೆಚ್ಚದ ಸೋಲಾರ್ ಪ್ಯಾನೆಲ್ ಅಳವಡಿಕೆ ಬಗ್ಗೆ ಚಿಂತನೆ ನಡೆಸಲಾಗಿದ್ದು, ಪ್ರತಿ ಪಂಚಾಯಿತಿಗೆ 3 ರಿಂದ 4 ಲಕ್ಷ ರೂ. ಖರ್ಚು ಅಂದಾಜಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದರು.
ನರೇಗಾದಲ್ಲಿ 800 ಕೋಟಿ ಹೆಚ್ಚುವರಿ ಅನುದಾನ
ಗ್ರಾಪಂಗೆ ಈ ಹಿಂದೆ 35 ಲಕ್ಷ ರೂ. ಅನುದಾನ ಬರುತ್ತಿತ್ತು. ಈಗ ಕೇಂದ್ರ ಸರ್ಕಾರ 15ನೇ ಹಣಕಾಸು ಯೋಜನೆಯಲ್ಲಿ ನೇರವಾಗಿ 1 ಕೋಟಿ ರೂ. ನೀಡುತ್ತಿದೆ. ಕೋವಿಡ್ ಸಂದರ್ಭದಲ್ಲಿ ರಾಜ್ಯಕ್ಕೆ ನರೇಗಾ ಯೋಜನೆಯಲ್ಲಿ 13 ಕೋಟಿ ಮಾನವ ದಿನಗಳ ಗುರಿ ನೀಡಲಾಗಿತ್ತು. ಈಗಾಗಲೇ 10.5 ಕೋಟಿ ಮಾನವ ದಿನಗಳು ಕಳೆದಿವೆ. ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಹೆಚ್ಚುವರಿಯಾಗಿ 800 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.