ಸಾಗರ: ಸರ್ಕಾರ ಗ್ರಾಮೀಣ ಭಾಗದ ಜನರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಅದು ನಿಜವಾದ ಫಲಾನುಭವಿಗಳಿಗೆ ತಲುಪಿಸುವಲ್ಲಿ ಗ್ರಾಪಂಗಳ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ತಾಲೂಕಿನ ಹೆಗ್ಗೋಡಿನಲ್ಲಿ ಗ್ರಾಪಂನ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರದ ಗ್ಯಾರಂಟಿಗಳು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸಹ ನಿಮ್ಮ ಸಹಕಾರ ಅಗತ್ಯ. ಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿಮನೆಗೂ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ಸ್ಥಳೀಯ ಜನಪ್ರತಿನಿಧಿಗಳು ಕಾಮಗಾರಿ ಯಶಸ್ಸಿಗೆ ತಮ್ಮ ಸಹಕಾರ ನೀಡಬೇಕು. ಹೆಗ್ಗೋಡು ಗ್ರಾಪಂ ಕಟ್ಟಡವನ್ನು ಅತ್ಯಂತ ಸುಂದರವಾಗಿ ನಿರ್ಮಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಮೆಚ್ಚುವಂತಹದ್ದು ಎಂದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆ ಮೂಲಕ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸಲು ಗ್ರಾಪಂ ಸೇತುವೆಯಾಗಿ ಕೆಲಸ ಮಾಡುತ್ತಿದೆ. ಪ್ರದೇಶವಾರು ಗ್ರಾಮ ಮಟ್ಟದಲ್ಲಿ ಸಮಸ್ಯೆಗಳು ಬೇರೆ ಬೇರೆ ಇರುತ್ತವೆ. ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು ಗ್ರಾಮಗಳ ಅಭಿವೃದ್ದಿಗೆ ಎಲ್ಲ ರೀತಿ ಸಹಕಾರ ನೀಡುವುದಾಗಿ ತಿಳಿಸಿದರು.
ಗ್ರಾಪಂ ಅಧ್ಯಕ್ಷ ರಾಜೇಶ್ ಮಾವಿನಸರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪಾಧ್ಯಕ್ಷ ಮಂಜಪ್ಪ ಗೌಡ, ಸದಸ್ಯರಾದ ಸುಮಾ, ಧರ್ಮಪ್ಪ, ಲಲಿತಾ, ಅರುಣಕುಮಾರ್, ಗುರುದತ್ತ, ಪವಿತ್ರಾ ರಾಘವೆಂದ್ರ, ಶೋಭಾ, ಮಂಜುಳಾ, ಕೌಶಲ್ಯಾ, ಪಿಡಿಒ ಸೌಮ್ಯಾ ಇತರರಿದ್ದರು.