ಮಂಡ್ಯ : ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಣಿಯಾಗುವ ಮೂಲಕ ಜೀವನದಲ್ಲಿ ಅತ್ಯುನ್ನತ ಸಾಧನೆ ಮಾಡಿ ಪಾಲಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರಬೇಕು ಎಂದು ಬೆಸಗರಹಳ್ಳಿ ಮಾನಸ ವಿದ್ಯಾಸಂಸ್ಥೆಯ ಅಧ್ಯಕ್ಷ ವಿ.ಕೆ.ಜಗದೀಶ್ ಸಲಹೆ ನೀಡಿದರು.
ಮದ್ದೂರು ತಾಲೂಕಿನ ಮಾನಸ ವಿದ್ಯಾಸಂಸ್ಥೆಯಲ್ಲಿ ಶನಿವಾರ ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ತಮ್ಮ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟವಾಗಿದ್ದು, ಇದನ್ನರಿತು ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆಗೊಂಡಿರುವುದು ಸಂತಸ ತಂದಿದೆ ಎಂದು ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ಶಾಲೆಗೆ 2023-24 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಸಿಬಿಎಸ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.92 ರಷ್ಟು ಫಲಿತಾಂಶ ಬಂದಿದೆ. ಗ್ರಾಮಾಂತರ ಪ್ರದೇಶದಲ್ಲಿರುವ ಮಾನಸ ವಿದ್ಯಾಸಂಸ್ಥೆಯಲ್ಲಿ ಓದಿದ ಗ್ರಾಮೀಣಾ ಭಾಗದ ಸಾವಿರಾರು ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ಅತ್ಯುನ್ನತ ಹುದ್ದೆಯಲ್ಲಿರುವುದು ಸಂಸ್ಥೆಯ ಹಿರಿಮೆಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಪಿ ಮಾಡಲು ಬಿಡುವುದಿಲ್ಲ. ಸಿಸಿ ಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯುತ್ತದೆ. ಪರೀಕ್ಷೆಯನ್ನು ಲಘುವಾಗಿ ಪರಿಗಣಿಸದೆ ನಿರಂತವಾಗಿ ವ್ಯಾಸಂಗ ಮಾಡುವ ಮೂಲಕ ಉತ್ತಮ ಅಂಕಗಳಿಸಿ ತೇರ್ಗಡೆಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಮಂಡ್ಯ ವಿಶ್ವ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ರಾಜು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಸಂಸ್ಥೆಯ ಖಜಾಂಚಿ ಸನತ್ಕುಮಾರ್, ಪ್ರಾಂಶುಪಾಲ ಪ್ರವೀಣ್ಕುಮಾರ್, ಮುಖ್ಯ ಶಿಕ್ಷಕರಾದ ರಮೇಶ್, ಶರತ್, ಬಸವರಾಜ್, ಪಲ್ಲವಿ, ಕುಮಾರ್ ಇದ್ದರು.