ಭದ್ರಾವತಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಮಹಿಳಾ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಯೋಜನೆ ಜಾರಿಗೆ ತಂದಿದ್ದಾರೆ ಎಂದು ನಗರಸಭೆ ಅಧ್ಯಕ್ಷೆ ಶ್ರುತಿ ವಸಂತಕುಮಾರ್ ಹೇಳಿದರು.
ನಗರಸಭೆ ಕಚೇರಿ ಆವರಣದಲ್ಲಿ ಗಹಲಕ್ಷ್ಮೀ ಯೋಜನೆ ಹಾಗೂ ಅರ್ಜಿ ಸ್ವೀಕೃತ ಕೇಂದ್ರಕ್ಕೆ ಚಾಲನೆ ನೀಡಿದ ಅವರು, ಈ ಯೋಜನೆಯಿಂದ ಬಡ ಮಹಿಳೆಯರಿಗೆ ಆರ್ಥಿಕವಾಗಿ ಸಾಕಷ್ಟು ಶಕ್ತಿ ತುಂಬಿದಂತಾಗಿದೆ ಎಂದರು.
ನಗರಸಭೆ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ಜನರಿಗೆ ಭರವಸೆ ಕೊಡುವುದು ಸುಲಭ. ಆದರೆ ಯೋಜನೆಯನ್ನು ಕಾರ್ಯರೂಪಕ್ಕೆ ತರುವುದು ಕಷ್ಟ . ಕೇವಲ 2 ತಿಂಗಳ ಅವಧಿಯಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದು ನುಡಿದಂತೆ ನಡೆದ ಸರ್ಕಾರ ಎಂಬ ಕೀರ್ತಿಗೆ ಕಾಂಗ್ರೆಸ್ ಭಾಜನವಾಗಿದೆ ಎಂದರು.
ಪೌರಾಯುಕ್ತ ಮನುಕುಮಾರ್ ಮಾತನಾಡಿ, ಅರ್ಜಿ ಸಲ್ಲಿಸಲು ನಗರಸಭೆ ವ್ಯಾಪ್ತಿಯಲ್ಲಿ 9 ಸ್ವೀಕೃತಿ ಕೇಂದ್ರಗಳನ್ನು ತೆರೆಯಲಾಗಿದೆ. ನಗರಸಭೆಯ 5 ಸ್ವೀಕೃತಿ ಕೇಂದ್ರಗಳು ಹಾಗೂ 4 ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸ್ಥಳ, ದಿನಾಂಕ ಹಾಗೂ ಸಮಯದ ಪೂರ್ಣ ಮಾಹಿತಿ ನಿಮ್ಮ ಮೊಬೈಲ್ನಲ್ಲಿಯೇ ದೊರೆಯುತ್ತದೆ. ಪಡಿತರ ಚೀಟಿ, ಆಧಾರ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕ ಅಗತ್ಯವಾಗಿದೆ. ಸಂಜೆ 6 ಗಂಟೆಯವರೆಗೂ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು.
ಉಪಾಧ್ಯಕ್ಷೆ ಸರ್ವಮಂಗಳಾ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್, ಸದಸ್ಯರಾದ ಗೀತಾ ರಾಜ್ಕುಮಾರ್, ಅನುಸುಧಾ ಮೋಹನ್, ಅಧಿಕಾರಿಗಳಾದ ಸುಹಾಸಿನಿ, ಸುನಿತಾ ಇತರರಿದ್ದರು.