ಬೆಂಗಳೂರು: ಈ ಹಿಂದೆ ಗೃಹಲಕ್ಷ್ಮೀ ಯೋಜನೆಯನ್ನು ಜು.16 ಅಥವಾ 17ರಂದು ಜಾರಿಗೆ ತರುವುದಾಗಿ ನಿರ್ಧರಿಸಲಾಗಿತ್ತು. ಆದರೆ ಇದೀಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಚಾಲನೆ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ತಿಳಿಸಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 19ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ಆಗಲಿದೆ.
ಕಾಂಗ್ರೆಸ್ ಘೋಷಿಸಿದ್ದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ಉದ್ಘಾಟನೆ 19ರಂದು ನಡೆಯುವುದಾಗಿ ನಿರ್ಧರಿಸಲಾಗಿದ್ದು ರಾಜ್ಯ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿಯನ್ನು ಕಾರ್ಯಕ್ರಮಕ್ಕೆ ಕರೆತರಲು ಪ್ರಯತ್ನಿಸುತ್ತಿದ್ದರು.
ಆದರೆ ಈ ಯತ್ನಕ್ಕೆ ಈಗ ಹಿನ್ನಡೆ ಉಂಟಾಗಿದ್ದು ಕೈ ನಾಯಕರ ನಿರೀಕ್ಷೆ ಹುಸಿಯಾಗಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೋನಿಯಾ ಗಾಂಧಿಗೆ ಪತ್ರ ಬರೆದು ಯೋಜನೆಗೆ ಚಾಲನೆ ನೀಡಲು ಆಗಮಿಸುವಂತೆ ವಿನಂತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಬರುತ್ತಾರೆ ಎನ್ನುವ ನಿರೀಕ್ಷೆಯಲ್ಲಿಯೇ ರಾಜ್ಯದ ಕೈ ನಾಯಕರೂ ಇದ್ದರು. ಆದರೆ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಇದೀಗ ಕೈ ನಾಯಕಿ ಸೋನಿಯಾ ಗಾಂಧಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಬರಲು ಒಪ್ಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವುದಾಗಿ ನಿರ್ಧರಿಸಲಾಗಿದೆ. ಇದೇ ತಿಂಗಳ 19ರಂದು ಬ್ಯಾಂಕ್ವೆಟ್ ಹಾಲ್ನಲ್ಲಿ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಯೋಜನೆಗೆ ಚಾಲನೆ ನೀಡಲಿದ್ದಾರೆ.