ಶಿವಮೊಗ್ಗ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸುತ್ತಿದ್ದಂತೆ ಜಿಲ್ಲೆಯ ಎಲ್ಲೆಡೆ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಶಿವಮೊಗ್ಗದ ಪಕ್ಷದ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಗೆಲುವನ್ನು ಸಂಭ್ರಮಿಸಿದರು.
ಮತ ಎಣಿಕೆ ಆರಂಭಗೊಂಡ ಬಳಿಕ ಪ್ರತಿ ಹಂತದಲ್ಲೂ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ಅಭ್ಯರ್ಥಿಗಳು ಅಂತಿಮವಾಗಿ 157 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಫಲಿತಾಂಶ ಹೊರಬೀಳುತ್ತಿದ್ದಂತೆ ನಗರದಲ್ಲೂ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಪಕ್ಷದ ಕಚೇರಿಗೆ ಜಮಾಯಿಸಿದ್ದ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರು ಕೇಂದ್ರದಲ್ಲಿ ಕೈಗೊಂಡ ಜನಪರ ಯೋಜನೆಗಳನ್ನು ಮೆಚ್ಚಿ ಜನರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ. ಇದು ದಾಖಲೆಯ ಜಯ ಎಂದು ಮೋದಿ ಮತ್ತು ಅಮಿತ್ ಷಾ ಅವರ ಪರ ಘೋಷಣೆಗಳನ್ನು ಕೂಗಿದರು.
ಮಹಾನಗರ ಪಾಲಿಕೆ ಸದಸ್ಯರಾದ ಎಸ್.ಎನ್.ಚನ್ನಬಸಪ್ಪ, ಸುನಿತಾ ಅಣ್ಣಪ್ಪ, ಎಸ್.ಜ್ಞಾನೇಶ್ವರ್, ಸುರೇಖಾ ಮುರಳೀಧರ್, ಈ.ವಿಶ್ವಾಸ್, ಪ್ರಭು, ಪ್ರಮುಖರಾದ ಎಸ್.ದತ್ತಾತ್ರಿ, ಎನ್.ಕೆ.ಜಗದೀಶ್, ಕೆ.ವಿ.ಅಣ್ಣಪ್ಪ, ಅಲ್ಲಾಭಕ್ಷ್, ವಿನ್ಸೆಂಟ್ ಡಿಸೋಜಾ, ರತ್ನಾಕರ್ ಶೆಣೈ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಹರಿಕೃಷ್ಣ ಮತ್ತಿತರರಿದ್ದರು.