ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಸಂಜೆ ಆದೇಶ ಹೊರಡಿಸಿದೆ.
ಕಲಬುರಗಿ ಜಿಲ್ಲೆಯಲ್ಲಿ ಕರೊನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಸಾವಿನ ಸಂಖ್ಯೆಯೂ 5ಕ್ಕೆ ತಲುಪಿದೆ. ನಿಯಂತ್ರಣ ಸಾಧ್ಯವಾಗದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವರ್ಗಾವಣೆಯಾಗಿದೆ ಎಂದು ಹೇಳಲಾಗುತ್ತಿದೆ.
ಆರಂಭದಲ್ಲಿಯೇ ಕ್ವಾರಂಟೈನ್ ಸೇರಿ ಯಾವುದೇ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಇರುವುದೇ ಸೋಂಕು ಹೆಚ್ಚಳಕ್ಕೆ ಕಾರಣವೆಂದು ಅಭಿಪ್ರಾಯಪಡಲಾಗುತ್ತಿದೆ. ಮಾರುಕಟ್ಟೆ ಆರಂಭಿಸಿದ್ದು, ರೋಗಿಗಳನ್ನು ಹೈದರಾಬಾದ್ಗೆ ಕಳುಹಿಸಿದ್ದು… ಹೀಗೆ ಅನೇಕ ವಿಚಾರಗಳಲ್ಲಿ ಸಾಕಷ್ಟು ತಪ್ಪುಗಳಾಗಿವೆ ಎಂದು ಸರ್ಕಾರದ ಮೂಲಗಳು ಹೇಳುತ್ತವೆ.
ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯಕಾರಿ ನಿರ್ದೇಶಕರ ಹುದ್ದೆಗೆ ವರ್ಗ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಸುರಲ್ಕರ್ ವಿಕಾಶ್ ಕಿಶೋರ್ ಅವರನ್ನು ಕಲಬುರಗಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.