ಹೂವಿನಹಡಗಲಿ: ರೈತರ ಅನುಕೂಲಕ್ಕೆ ಪಟ್ಟಣದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಭರವಸೆ ನೀಡಿದರು.
ಪಟ್ಟಣದಲ್ಲಿ ಟಿಎಪಿಎಂಎಸ್ ವಾಣಿಜ್ಯ ಮಳಿಗೆಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ತಾಲೂಕಿನ ರೈತರಿಗಾಗಿ ಈಗಾಗಲೇ ತೊಗರಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಅದರಂತೆ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಜಿಲ್ಲಾಧಿಕಾರಿ ಜತೆ ಮಾತನಾಡುತ್ತೇನೆ ಎಂದರು. ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಜತೆ ಸೌಹಾರ್ದದಿಂದ ನಡೆದುಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಸೂಚಿಸಿದರು. ಬಳಿಕ ಶಾಸಕರು ಕಾಯಕನಗರ, ಕತ್ತೆಬೆನ್ನೂರು ಗ್ರಾಮದಲ್ಲಿ ಬಾಲಕರ ವಸತಿ ನಿಲಯ, ಸೊಪ್ಪಿನ ಕಾಳಮ್ಮ ಬಡಾವಣೆಯಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳಿಗೆ ಭೂಮಿ ಪೂಜೆ ನೆರವೇರಿಸಿದರು. ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ಸೋಲಾರ್ ಲ್ಯಾಂಪ್ ವಿತರಿಸಲಾಯಿತು.
ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಐಗೋಳ ಚಿದಾನಂದ, ತಾಪಂ ಅಧ್ಯಕ್ಷ ಅಂಬ್ಲಿ ಮಲ್ಲಿಕಾರ್ಜುನ, ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ, ತಾಪಂ ಸದಸ್ಯ ಹಾಲೇಶ, ಅರವಳ್ಳಿ ವೀರಣ್ಣ ಇತರರಿದ್ದರು.