ಚಿಕ್ಕಮಗಳೂರು: ಕಟ್ಟಡ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಹಮಾಲಿ ಕಾರ್ಮಿಕರಿಗೂ ನೀಡುವಂತೆ ಒತ್ತಾಯಿಸಿ ಸಂಘಟಿತ ಹೋರಾಟಕ್ಕೆ ಮುಂದಾಗಬೇಕೆAದು ಸಿಪಿಐ ನ ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ರೇಣುಕಾರಾಧ್ಯ ತಿಳಿಸಿದರು.
ನಗರದ ತಮಿಳು ಕಾಲನಿಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ನಗರದ ಹಮಾಲಿ ಕಾರ್ಮಿಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಟ್ಟಡ ಕಾರ್ಮಿಕರಿಗೆ ಸರ್ಕಾರ ನಿವೃತ್ತಿ ವೇತನ, ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮದುವೆಗೆ ಸಹಾಯಧನ, ಚಿಕಿತ್ಸಾವೆಚ್ಚ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಹಮಾಲಿ ಕಾರ್ಮಿಕರು ಅವರಷ್ಟೇ ಶ್ರಮಪಟ್ಟು ದುಡಿದರೂ ಈ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಿರುವುದು ದುರಾದೃಷ್ಟಕರ ಎಂದು ಹೇಳಿದರು.
ಅಸಂಘಟಿತ ಕಾರ್ಮಿಕರೆಂದು ಗುರುತಿಸಲ್ಪಡುತ್ತಿರುವ ಹಮಾಲಿ ಕಾರ್ಮಿಕರುಗಳಿಗೆ ಇಂದಿಗೂ ವಾಸಿಸಲು ಮನೆ ಇಲ್ಲ. ಸರ್ಕಾರದ ಸೌಲಭ್ಯಗಳಿಂದ ಸಂಪೂರ್ಣ ವಂಚಿತರಾಗಿ ಸಂಕಷ್ಟದಲ್ಲಿ ಬದುಕುತ್ತಿದ್ದು, ಅವರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಕಾಳಜಿ ವಹಿಸುವ ಅಗತ್ಯವಿದೆ ಎಂದು ಹೇಳಿದರು.
ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಜಿ.ರಘು ಮಾತನಾಡಿ, ರೈತರು ಮತ್ತು ಕಾರ್ಮಿಕರಿಲ್ಲದ ಪ್ರಪಂಚವನ್ನು ಊಹಿಸಲೂ ಸಾಧ್ಯವಿಲ್ಲ. ಒಂದು ದಿನ ಕಾರ್ಮಿಕರು ತಮ್ಮ ಕಾರ್ಯತೊರೆದು ನಿಷ್ಕಿöçಯರಾದರೆ ವ್ಯವಸ್ಥೆ ದಿವಾಳಿಯತ್ತ ಸಾಗುತ್ತದೆ. ದೇಶವನ್ನು ಆಳಬೇಕಾದ ಬಹು ಸಂಖ್ಯಾತ ಕಾರ್ಮಿಕರು, ರೈತರು ಕಾರ್ಪೊರೇಟ್ ಸಂಸ್ಥೆಗಳ ಕಪಿಮುಷ್ಠಿಯಲ್ಲಿ ಸಿಲುಕಿ ನಲುಗುವಂತಾಗಿದೆ. ಕಾರ್ಮಿಕರು ಮತ್ತು ರೈತರು ತಮ್ಮ ಪರವಾದ ಸರ್ಕಾರಗಳನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ಕಾರ್ಮಿಕರಿಂದ ದುಡಿಸಿಕೊಳ್ಳುವ ಜನ ಐಷಾರಾಮಿಯಾಗಿ ಜೀವನ ಮಾಡುತ್ತಿದ್ದಾರೆ. ಆದರೆ ಬೆವರು ಹರಿಸಿ ಶ್ರಮಿಸುವ ಕಾರ್ಮಿಕರು ಯಾವುದೇ ಸೌಲಭ್ಯಗಳಿಲ್ಲದೆ ನರಳುತ್ತಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಕಾರ್ಮಿಕರು ಪ್ರಶ್ನಿಸುವಂತಾಗÀಬೇಕು. ತಮಗೆ ಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.
ಪತ್ರಕರ್ತ ಪಿ.ರಾಜೇಶ್ ಮಾತನಾಡಿ, ಹಸಿವಿಗೆ ಜಾತಿ, ಧರ್ಮದ ಸೋಂಕಿಲ್ಲ. ಹಮಾಲಿ ಕಾರ್ಮಿಕರ ಸಂಘಟನೆಯಲ್ಲಿ ಎಲ್ಲ ಜಾತಿಯ, ಎಲ್ಲ ವರ್ಗದ ಜನರು ಅಂದಿನ ತುತ್ತಿಗಾಗಿ ಶ್ರಮಪಟ್ಟು ದುಡಿಯುತ್ತಿದ್ದಾರೆ. ನಿಜವಾದ ವಿವಿಧತೆಯಲ್ಲಿ ಏಕತೆ ಇರುವುದು ಹಮಾಲಿ ಕಾರ್ಮಿಕರ ಸಂಘದಲ್ಲಿ ಎಂದು ಹೇಳಿದರು.
ವರ್ತಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರಾಷ್ಟç ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕರ ಪಾತ್ರ ಪ್ರಮುಖವಾದದ್ದು. ಕಾರ್ಮಿಕರಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ ಗುರುಮೂರ್ತಿ, ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ರಹೀಂ ಕಾಕಾ, ಕಾರ್ಯದರ್ಶಿ ಎಸ್ .ಎನ್.ಮಂಜು, ವರ್ತಕರ ಸಂಘದ ಕಾರ್ಯದರ್ಶಿ ತನೋಜ್ ನಾಯ್ಡು, ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯ, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಪಾಪಣ್ಣ, ಹಮಾಲಿ ಕಾರ್ಮಿಕರ ಸಂಘದ ಹಾಲಪ್ಪ, ಸರವಣ, ನಾಗರಾಜ , ಗುರುಮೂರ್ತಿ ಮತ್ತಿತರರಿದ್ದರು.