ಹರಿಹರ: ಹೆಣ್ಣು, ಗಂಡೆಂಬ ಭೇದ ಭಾವದಿಂದ ಕುಟುಂಬ ಹಾಗೂ ಸಮಾಜಕ್ಕೆ ದೊಡ್ಡ ನಷ್ಟವಿದೆ ಎಂದು ಹಿರಿಯ ಆರೋಗ್ಯ ಸಹಾಯಕ ಎಂ. ಉಮ್ಮಣ್ಣ ಹೇಳಿದರು.
ನಗರದ ಸ್ತ್ರೀಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಗಂಡು ಮಕ್ಕಳಲ್ಲಿರುವ ಎಲ್ಲ ಸಾಮರ್ಥ್ಯ ಹೆಣ್ಣು ಮಕ್ಕಳಲ್ಲಿದೆ. ಮಹಾನಗರಗಳಲ್ಲಿ ಲಿಂಗ ತಾರತಮ್ಯ ಬಹುತೇಕ ನಿವಾರಣೆಯಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇನ್ನೂ ಜೀವಂತವಾಗಿದೆ. ಇದರ ನಿವಾರಣೆಗೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು.
ಸಿಡಿಪಿಒ ನಿರ್ಮಲಾ ಅಧ್ಯಕ್ಷತೆವಹಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ರಕ್ಷಣೆ, ಉದ್ಯೋಗಕ್ಕಾಗಿ ಹತ್ತಾರು ಯೋಜನೆಗಳನ್ನು ರೂಪಿಸಿದೆ. ಇದಕ್ಕಾಗಿ ನೂರಾರು ಕೋಟಿ ರೂ. ವ್ಯಯಿಸಲಾಗುತ್ತಿದೆ. ಇದರ ಉಪಯೋಗ ಪಡೆದುಕೊಂಡು ಹೆಣ್ಣು ಮಕ್ಕಳು ಪ್ರಗತಿ ಕಾಣಬೇಕು ಎಂದರು.