ಶಿವಮೊಗ್ಗ: ಇಡೀ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದ ಬಜರಂಗ ದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ(ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದು ಹರ್ಷನ ಹತ್ಯೆಗೆ 15 ದಿನಗಳಿಂದ ಸ್ಕೆಚ್ ಹಾಕಿದ್ದರು ಎಂಬುದು ಬೆಳಕಿಗೆ ಬಂದಿದೆ.
ಇನ್ಸ್ಪೆಕ್ಟರ್ ಷಣ್ಮುಗಂ ನೇತೃತ್ವದಲ್ಲಿ ತನಿಖಾ ತಂಡ ಮಾರ್ನಾಲ್ಕು ಬಾರಿ ಶಿವಮೊಗ್ಗಕ್ಕೆ ಬಂದು ವಿವಿಧ ಹಂತದಲ್ಲಿ ತನಿಖೆ ನಡೆಸಿದ್ದು ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಕಳೆದ ಫೆ.20ರಂದು ರಾತ್ರಿ ಭಾರತಿ ಕಾಲನಿಯಲ್ಲಿ ಹರ್ಷನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರು ವಿವಿಧ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದು ಇದೀಗ ಎನ್ಐಎ ಪೊಲೀಸರು ಚಾರ್ಜ್ಶೀಟ್ ಸಲ್ಲಿಸುವ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ.
ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ.ಗಂಗಾಧರ ಅವರ ನೇತೃತ್ವದ ಪೀಠಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಹರ್ಷನ ಹತ್ಯೆ ವಿಚಾರದ ಹುನ್ನಾರದ ಬಗ್ಗೆ ಈ ಚಾರ್ಜ್ಶೀಟ್ನಲ್ಲಿ ಹೇಳಲಾಗಿದೆ. ಹರ್ಷನ ಹತ್ಯೆಗೆ ಹಣಕಾಸಿನ ಕೊರತೆ ಎದುರಾದಾಗ ಕುಂಸಿಯಲ್ಲಿ ಮನೆಯಲ್ಲಿದ್ದ ಸಾಮಗ್ರಿ ಕಳ್ಳತನ ಮಾಡಿ ಅಲ್ಲಿ ಸಿಕ್ಕ ಹಣದಲ್ಲಿ ಮಾರಕಾಸ್ತ್ರಗಳನ್ನು ಖರೀದಿಸಿದ್ದರು ಎಂಬುದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.