ಚನ್ನರಾಯಪಟ್ಟಣ: ಗ್ರಾಮೀಣ ಪ್ರದೇಶ ಅಭಿವೃದ್ಧಿ ಹೊಂದಿದಲ್ಲಿ ದೇಶ ಪ್ರಗತಿ ಕಾಣಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.
ತಾಲೂಕಿನ ಹಿರೀಸಾವೆ ಹೋಬಳಿ ಡಿ.ತುಮಕೂರು ಗ್ರಾಮದಲ್ಲಿ ಸುವರ್ಣ ಗ್ರಾಮ ಯೋಜನೆಯಡಿ ನಡೆಯುತ್ತಿರುವ 7 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿದರು. ಮೂಲಸೌಕರ್ಯಗಳಲ್ಲಿ ಅಮೂಲ್ಯವಾದ ಕುಡಿಯುವ ನೀರನ್ನು ಒದಗಿಸುವುದು ಅಗತ್ಯ ಎಂದು ತಿಳಿಸಿದರು.
ಬಾಕ್ಸ್ ಚರಂಡಿ, ಕಾಂಕ್ರೀಟ್ ರಸ್ತೆ, ಅಗತ್ಯ ಸ್ಥಳಗಳಲ್ಲಿ ನೀರಿನ ತೊಂಬೆ ಅಳವಡಿಕೆ ಸೇರಿ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಅಗಲೀಕರಣದೊಂದಿಗೆ ಅಭಿವೃದ್ಧಿಪಡಿಸಲು ಸ್ಥಳೀಯ ಸಂಸ್ಥೆಗಳಲ್ಲಿ ಹಲವು ಯೋಜನೆಗಳಿವೆ, ಗ್ರಾಮಸ್ಥರು ಅವುಗಳನ್ನು ಕೇಳಿ ಪಡೆದು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ದಿಡಗ ಹಾಗೂ ಕಬ್ಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪ್ರಸ್ತಾವನೆ ಹಂತದಲ್ಲಿದ್ದು, ಅನುಷ್ಠಾನಗೊಂಡರೆ ಸುತ್ತಲಿನ ಸುಮಾರು 30 ಹಳ್ಳಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.
ಸುವರ್ಣ ಗ್ರಾಮ ಯೋಜನೆಯಡಿ 5 ಲಕ್ಷ ರೂ. ವೆಚ್ಚದ ಹೈಮಾಸ್ಟ್ ದೀಪವನ್ನು ಗ್ರಾಮದ ಪ್ರಮುಖ ಸ್ಥಳದಲ್ಲಿ ಅಳವಡಿಸುವ ಕಾರ್ಯ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ದಿಡಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಆರ್.ರತ್ನರಾಜ್, ಸದಸ್ಯ ಕೆಂಪೇಗೌಡ, ಮಾಜಿ ಉಪಾಧ್ಯಕ್ಷ ಎಲ್.ರವಿಕುಮಾರ್, ಪ್ರಮುಖರಾದ ಮಂಜುನಾಥ್, ಕುಮಾರ್ ಇತರರು ಇದ್ದರು.
