ಹಾಸನ: ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟದ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದು ಎಸ್ಡಿಆರ್ಎಫ್ ಅನ್ವಯ ಶೀಘ್ರದಲ್ಲೇ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ನಗರದ ಶ್ರೀ ಜವೇನಹಳ್ಳಿ ಮಠಕ್ಕೆ ಭಾನುವಾರ ಬೆಳಗ್ಗೆ ಭೇಟಿ ನೀಡಿ ಸಂಗಮೇಶ್ವರ ಸ್ವಾಮೀಜಿ ಅವರ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಎರಡು ತಿಂಗಳು ಸುರಿದ ಮಳೆಯಿಂದ ಬಹುತೇಕ ಜಿಲ್ಲೆಗಳಲ್ಲಿ ಬೆಳೆ ಹಾನೀಗಿಡಾಗಿದೆ. ನಾನೇ ಖುದ್ದಾಗಿ ಜಮೀನಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ರೈತರು ಎದುರಿಸುತ್ತಿರುವ ತೊಂದರೆ ಬಗ್ಗೆ ಸಂಪೂರ್ಣ ಮಾಹಿತಿ ಇದೆ ಎಂದರು.
ಕೃಷಿ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆ ತರಲು ಸಚಿವನಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಪ್ರಯತ್ನಿಸುತ್ತಿದ್ದೇನೆ. ಆ ನಿಟ್ಟಿನಲ್ಲಿ ಸಾಕಷ್ಟು ಕೆಲಸಗಳಾಗಿವೆ. ಹಾಸನದ ಜವೇನಹಳ್ಳಿ ಮಠ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಬಿಜೆಪಿ ಮುಖಂಡರಾದ ಎಚ್.ಎನ್. ನಾಗೇಶ್, ಶೋಭನ್ ಬಾಬು, ಜಿ.ಎಸ್. ಅವಿನಾಶ್, ದರ್ಶನ್, ನರೇಶ್, ಶೋಭಾ ಮಹೇಶ್, ಅಮೃತ ಆರಾಧ್ಯ, ಪರಮೇಶ್ವರ್ ಹಾಗೂ ಇತರರಿದ್ದರು.