ಹಾವೇರಿ: ಮಂಡ್ಯ ಜಿಲ್ಲೆಯ ಕೆರಗೋಡ ಗ್ರಾಮದಲ್ಲಿ ಹನುಮಾನ ಧ್ವಜ ಮತ್ತು ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ್ದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಬಿಜೆಪಿ ಕಾರ್ಯಾಲಯದದಿಂದ ಪಾದಯಾತ್ರೆಯ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ತೆರಳಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಮಂಡ್ಯ ಜಿಲ್ಲೆಯ ಕೆರಗೋಡ ಗ್ರಾಮದಲ್ಲಿ ಹನುಮಾನ ಧ್ವಜ ಮತ್ತು ರಾಷ್ಟ್ರ ಧ್ವಜಕ್ಕೆ ತೆರವುಗೊಳಿಸಿರುವುದು ಖಂಡನೀಯ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಹಿಂದುಗಳನ್ನು ದ್ವೇಷಿಸುವ ಕೆಲಸ ಮಾಡುತ್ತಿದ್ದಾರೆ. ಮೊದಲು ನೀವು ಹಿಂದು ರಾಷ್ಟ್ರದಲ್ಲಿ ಇದ್ದೀರಿ ಎಂಬುದನ್ನು ತಿಳಿದುಕೊಳ್ಳಬೇಕು. ಪ್ರತಿ ಬಾರಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತ ಬರುತ್ತಿದೆ. ಇದೇ ರೀತಿ ಮುಂದುವರಿದರೆ ರಾಜ್ಯದ ಜನತೆ ಸುಮ್ಮನೆ ಇರುವುದಿಲ್ಲ. ಪ್ರತಿ ಮನೆಯಲ್ಲೂ ರಾಮನು ಹುಟ್ಟಿ ದೇಶದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ದುಳಿಪಟ್ಟ ಮಾಡುತ್ತಾರೆ ಎಚ್ಚರಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಮಂಡ್ಯದಲ್ಲಿ ನಡೆದಿರುವ ಹಿಂದುಗಳ ಮೇಲೆ ಹಲ್ಲೆ ಖಂಡನೀಯ. ಸರ್ಕಾರವು ಪೋಲಿಸ್ ಇಲಾಖೆಯನ್ನು ತಮ್ಮ ಕೈಗೊಂಬೆಯಾಗಿ ಮಾಡಿಕೊಂಡು ಹಿಂದುಗಳ ಮೇಲೆ ದೌರ್ಜನ್ಯ ಎಸಗುತ್ತಿದೆ. ಇದೇ ರೀತಿ ರಾಜ್ಯದಲ್ಲಿ ಹಲವು ಕಡೆ ಘಟನೆಗಳು ಆದರೂ ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಂತಿರುವ ರಾಜ್ಯ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಕೆರಗೋಡ ಗ್ರಾಮದಲ್ಲಿ ಸಾರ್ವಜನಿಕರು ಮತ್ತು ಮಹಿಳೆಯರ ಮೇಲೆ ಲಾಠಿ ಪ್ರಹಾರ ನಡೆಸಿ ಹನುಮಾನ ಧ್ವಜ ಕೆಳಗಿಳಿಸಿದ ಸರ್ಕಾರದ ಹಿಂದು ವಿರೋಧಿ ನೀತಿ ಸರಿಯಲ್ಲ ಎಂದರು.
ಮಾಜಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಮಂಡ್ಯದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲೆಯಲ್ಲಿರುವ ಶಾಸಕರ ಮನೆ ಎದುರು ಧರಣಿ ಮಾಡಬೇಕಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಹಿಷ್ಕಾರ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಾಜಿ ಶಾಸಕ ಶಿವರಾಜ ಸಜ್ಜನರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಪ್ರಮುಖರಾದ ಗವಿಸಿದ್ದಪ್ಪ ದ್ಯಾಮಣ್ಣವರ, ಕೆ. ಶಿವಲಿಂಗಪ್ಪ, ಭಾರತಿ ಜಂಬಗಿ, ಶಶಿಧರ ಹೊಸಳ್ಳಿ, ರುದ್ರೇಶ ಚಿನ್ನಣ್ಣನವರ, ಕರಬಸಪ್ಪ ಹಳದೂರ, ವಿಜಯಕುಮಾರ ಚಿನ್ನಿಕಟ್ಟಿ, ರತ್ನಾ ಭಿಮಕ್ಕನವರ, ಸುರೇಶ ಹೊಸಮನಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.