ಹಾವೇರಿ: ಬೆಳಗಾವಿಯ ವಂಟಮೂರಿಯಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ದುಷ್ಕೃತ್ಯವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ನಗರದ ಬಿಜೆಪಿ ಕಾರ್ಯಾಲಯದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ನಂತರ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ಸ್ಪಂದನೆ ರಹಿತ ಸರ್ಕಾರವಾಗಿದ್ದು, ಮಹಿಳೆಯರು ಸುರಕ್ಷಿತವಾಗಿ ಬದುಕುವುದು ಕಷ್ಠವಾಗಿದೆ. ರೈತರು ಮಳೆ ಬೆಳೆ ಇಲ್ಲದೇ ಕಂಗಾಲಾಗಿರುವ ಸಂದರ್ಭದಲ್ಲಿ ರೈತರು ಅಸಲು ತುಂಬಿದರೆ ಬಡ್ಡಿ ಮನ್ನಾ ಮಾಡುವುದಾಗಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸರ್ಕಾರ ನಡೆಸುವುದಕ್ಕಿಂತ ರಾಜಿನಾಮೆ ಕೊಟ್ಟು ಮನೆಯಲ್ಲಿ ವಿಶ್ರಮಿಸುವುದು ಒಳ್ಳೆಯದು. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಗುಡುಗಿದರು.
ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಣ ಮಾಡುವ ಉದ್ದೇಶದಿಂದ ಎಲ್ಲ ಕಾನೂನು ಬಾಹಿರ ಚಟುವಟಿಕೆಗಳಿಗೆ ಮುಕ್ತ ಅವಕಾಶ ಕಲ್ಪಿಸಿಕೊಟ್ಟಿದೆ. ಇದರಿಂದ ಸಮಾಜದಲ್ಲಿ ಯುವಸಮುದಾಯ ದಾರಿ ತಪ್ಪುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಜಿಲ್ಲಾದ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ರಾಜ್ಯಾದ್ಯಂತ ಹೆಣ್ಣು ಶಿಶು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಮೀನಮೇಷ ಎಣಿಸುತ್ತಿರುವುದನ್ನು ನೋಡಿದರೆ ಸರ್ಕಾರವೂ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯಿದೆ ಎಂದು ವಾಗ್ದಾಳಿ ನಡೆಸಿದರು.
ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣನವರ, ಮಾಜಿ ಜಿಲ್ಲಾಧ್ಯಕ್ಷ ಕೆ.ಶಿವಲಿಂಗಪ್ಪ, ಜಿಲ್ಲಾ ಉಪಾಧ್ಯಕ್ಷರಾದ ವೀರೆಂದ್ರ ಶೆಟ್ಟರ, ಕೆ.ಸಿ.ಕೋರಿ, ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ ಹೊಸಳ್ಳಿ, ಕೃಷ್ಣಾ ಈಳಗೇರ, ರುದ್ರೇಶ ಚಿನ್ನಣ್ಣನವರ, ಜಿಲ್ಲಾ ಕಾರ್ಯದರ್ಶಿಗಳಾದ ಡಾ.ಸಂತೋಷ ಅಲದಕಟ್ಟಿ, ಶೋಭಾ ನಿಸ್ಸಿಮಗೌಡ್ರ, ನಿಂಗಪ್ಪ ಗೋಬ್ಬೇರ, ಶಿವಾನಂದ ಮ್ಯಾಗೇರಿ, ಶಿವಕುಮಾರ ತಿಪ್ಪಶೆಟ್ಟಿ, ನೀಲಪ್ಪ ಚಾವಡಿ, ಮಂಜುನಾಥ ಬ್ಯಾಹಟ್ಟಿ, ಕಲ್ಯಾಣಕುಮಾರ ಶೆಟ್ಟರ, ಅಲ್ಲಾಭಕ್ಷ ತಿಮ್ಮಾಪೂರ, ಜಗದೀಶ ಬಸೆಗಣ್ಣಿ, ನಿರಂಜನ ಹೇರೂರ, ಜಗದೀಶ ಕನವಳ್ಳಿ, ಮಂಜುನಾಥ ಮಡಿವಾಳರ, ಕರಬಸಪ್ಪ ಹಳದೂರ, ಶರಣಬಸವ ಅಂಗಡಿ, ವಿಜಯಕುಮಾರ ಚಿನ್ನಿಕಟ್ಟಿ, ರಮೇಶ ಪಾಲನಕರ, ಮಂಜುನಾಥ ತಾಂಡೂರ, ನಿಖಿಲ ಡೊಗ್ಗಳ್ಳಿ, ಯುಸೂಫ್ ಅಲಿ ಕರ್ಜಗಿ, ಯೋಗಿನಿ ಸೋಪ್ಪಿನ, ಲತಾ ಬಡ್ನಿಮಠ, ತಾರಾ ವಡ್ಡರ, ಜ್ಯೋತಿ ಸಾತೇನಹಳ್ಳಿ, ಪವಿತ್ರಾ ಹರಿಜನ, ಮತ್ತಿತರರು ಇದ್ದರು.