ಹಾವೇರಿ: ವಿಧಾನಸಭೆ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 13ರಂದು ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೇ 12ರ ಸಂಜೆ 6ರಿಂದ ಮೇ 14ರ ಬೆಳಗ್ಗೆ 6 ಗಂಟೆವೆರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಿ ಓಡಾಡುವುದನ್ನು ನಿಷೇಧಿಸಿದೆ. ಜೀವಕ್ಕೆ ಹಾನಿಯುಂಟು ಮಾಡುವ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವುದನ್ನು ನಿಷೇಧಿಸಿದೆ. ಕ್ಷಾರಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಜತೆಗಿಟ್ಟುಕೊಂಡು ಹೋಗುವುದನ್ನು ಹಾಗೂ ಶೇಖರಿಸಿವುದನ್ನು ನಿಷೇಧಿಸಲಾಗಿದೆ.
ಸಭೆ, ಮೆರವಣಿಗೆ ನಿಷೇಧ
ನಿಷೇಧಾಜ್ಞೆ ಜಾರಿಯಾದ ಅವಧಿಯಲ್ಲಿ ಯಾವುದೇ ಸಭೆ-ಸಮಾರಂಭ ಅಥವಾ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಶವ ಸಂಸ್ಕಾರ, ಮದುವೆ ಹಾಗೂ ಧಾರ್ಮಿಕ ಸಭೆ-ಸಮಾರಂಭಗಳಿಗೆ ಅನ್ವಯಿಸುವುದಿಲ್ಲ.
ರಜೆ ಘೋಷಣೆ:
ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಹಾವೇರಿ ತಾಲೂಕಿನ ದೇವಗಿರಿ ಸರ್ಕಾರಿ ಇಂಜನೀಯರಿಂಗ್ ಕಾಲೇಜಿನಲ್ಲಿ ನಡೆಯುವುದರಿಂದ ಮೇ 13ರಂದು ಈ ಕಾಲೇಜಿಗೆ ರಜೆ ಘೋಷಿಸಲಾಗಿದೆ.