ಹಾವೇರಿ: ಬೇಸಿಗೆ ಹಿನ್ನೆಲೆಯಲ್ಲಿ ಪಕ್ಷಿ ಸಂಕುಲದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಮಡಕೆ, ಪಾತ್ರೆ, ಟಬ್ಗಳಲ್ಲಿ ನಿತ್ಯವೂ ಸಾಕಷ್ಟು ನೀರು ತುಂಬಿಸಿ ಇಡಿ ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ರಘುನಂದನ ಮೂರ್ತಿ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೇ ಪಕ್ಷಿಗಳಿಗೆ ಸಹ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಇಂತಹ ಸಮಯದಲ್ಲಿ ಹೆಚ್ಚಿನ ನೀರಿನ ಅಗತ್ಯವಿದ್ದು, ಪಕ್ಷಗಳು ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕವಾಗಿದೆ. ಮಡಕೆ, ಪಾತ್ರೆ, ಟಬ್ಗಳಲ್ಲಿ ನಿಯಮಿತವಾಗಿ ನೀರು ಬದಲಾಯಿಸಿಕೊಂಡು ಸೊಳ್ಳೆಗಳು ಉತ್ಪತ್ತಿಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.