ಹಾವೇರಿ: ಮಕ್ಕಳು ವಿದ್ಯಾಭ್ಯಾಸದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸದಾ ಚಟುವಟಿಕೆಯಿಂದ ಇರಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಎನ್. ಹುಗ್ಗಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಶೈಕ್ಷಣಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ಪರ್ಧೆಗಳಲ್ಲಿ ಸೋಲು, ಗೆಲುವು ಸಾಮಾನ್ಯವಾಗಿದ್ದು. ಎಲ್ಲ ಮಕ್ಕಳು ಸ್ಪರ್ಧಾ ಮನೋಭಾವದಿಂದ ಭಾಗವಹಿಸುವುದು ಮುಖ್ಯ. ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಹೊರಹಾಕುಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಹೇಳಿದರು.
ವಿವಿಧ ಸ್ಪರ್ಧೆಗಳು: ಲಘು ಸಂಗೀತ, ಛದ್ಮ ವೇಷ, ಚಿತ್ರಕಲೆ ಮತ್ತು ಬಣ್ಣ ಹಚ್ಚುವಿಕೆ, ಅಭಿನಯ ಗೀತೆ, ಕ್ಲೇಮಾಡಲಿಂಗ್, ಭಕ್ತಿ ಗೀತೆ, ಅಶು ಭಾಷಣ, ಮಿಮಿಕ್ರಿ ಹಾಗೂ ಕವನ, ಚರ್ಚಾ ಸ್ಪರ್ಧೆ, ರಂಗೋಲಿ, ಆಶು ಭಾಷಣ, ಜಾನಪದ ನೃತ್ಯ, ಕ್ವಿಜ್, ಕವ್ವಾಲಿ ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಿದವು.
ತೀರ್ಪುಗಾರರಾಗಿ ಬಸವರಾಜ ಜವಾಯಿ, ನಿರಂಜನ ಗುಡಿ, ವಾಸುದೇವ ಕುಲಕರ್ಣಿ, ಶಿವಾನಂದ ಕುಂಕದ, ಎಂ.ಎಸ್.ಕೆಂಚನಗೌಡ್ರ, ಸಿ.ಎಸ್.ಕೊಳಚಿ, ಎಂ.ಜಿ.ಹಿರೇಮಠ, ಇತರರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಎ.ಎಣ್ಣಿ, ಶಿಕ್ಷಣ ಇಲಾಖೆ ಅಧಿಕಾರಿ ರಮೇಶ, ನಿರಂಜನ ಮೂರ್ತಿ, ವಿಜಯೇಂದ್ರ ಯತ್ನಳ್ಳಿ, ಬಿ.ಎಂ.ಹಿರೇಮಠ, ಮಲ್ಲಿಕಾರ್ಜುನ ಶಾಂತಗಿರಿ, ಎನ್.ಎನ್.ಕುಂದೂರು, ಎನ್.ಎಸ್.ಕೆಂಚನಹಳ್ಳಿ, ಇತರರು ಉಪಸ್ಥಿತರಿದ್ದರು.
ಈರಪ್ಪ ಲಮಾಣಿ ಸ್ವಾಗತಿಸಿದರು. ರೂಹಿನಾ ಮಾಣಿಕ ನಿರೂಪಿಸಿದರು. ದೇವೇಂದ್ರಪ್ಪ ಬಸಮ್ಮನವರ ವಂದಿಸಿದರು.
25 ಸಾವಿರ ರೂ. ಬಹುಮಾನ
2022-23ನೇ ಸಾಲಿನ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಪ್ರೀತಿ ಲಮಾಣಿ ಅವರಿಗೆ ಇಲಾಖೆಯಿಂದ 25 ಸಾವಿರ ರೂ. ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.