ಹಾವೇರಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಹಸಿಶುಂಠಿ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ನಾಲ್ಕು ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸಲು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ನಿಗದಿಪಡಿಸಿದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯ ಮಾರ್ಗಸೂಚಿ ಅನ್ವಯ ಎಫ್.ಎ.ಕ್ಯೂ ಗುಣಮಟ್ಟದ ಹಸಿ ಶುಂಠಿ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿ ಪ್ರತಿ ಕ್ವಿಂಟಲ್ಗೆ 2,445ರೂ. ರಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ರೈತರ ನೋಂದಣಿ ಕಾರ್ಯದ ಜೊತೆಗೆ ಖರೀದಿ ಕಾರ್ಯವನ್ನು ಆರಂಭಿಸಿ, ರಾಜ್ಯ ಸಹಕಾರ ಮಾರಾಟ ಮಂಡಳಿ ನಿಯಮಿತ ಸಂಸ್ಥೆಯ ಮೂಲಕ ಕೇಂದ್ರ ಸರ್ಕಾರದ ಅನುಮೋದಿಸಿದ ದಿನಾಂಕದಿಂದ 30 ದಿನಗಳವರೆಗೆ ಖರೀದಿಗೆ ಕ್ರಮವಹಿಸುವಂತೆ ಸೂಚನೆ ನೀಡಿದರು.
ಖರೀದಿ ಕೇಂದ್ರ…
ಹಸಿಶುಂಠಿ ಖರೀದಿ ಕೇಂದ್ರಗಳನ್ನು ಹಾನಗಲ್ಲ, ಹಿರೇಕೆರೂರ, ಬ್ಯಾಡಗಿ ಹಾಗೂ ಶಿಗ್ಗಾಂವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲ್ಲಿ ತೆರೆಯಲು ಸೂಚಿಸಿದರು. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಪ್ರತಿ ಎಕರೆಗೆ 30 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಾಲ್ ಎಫ್.ಎಕ್ಯೂ ಗುಣಮಟ್ಟದ ಹಸಿಶುಂಠಿ ಖರೀದಿಗೆ ಅವಕಾಶವಿದೆ. ಹಸಿಶುಂಠಿ ಖರೀದಿ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಬೇಕು ಎಂದು ಸಲಹೆ ನೀಡಿದರು.
ನೈಜ ರೈತರಿಂದ ಮಾತ್ರ ಖರೀದಿ…
ನೈಜ ರೈತರಿಂದ ಮಾತ್ರ ಹಶಿಶುಂಠಿ ಖರೀದಿಗೆ ಕ್ರಮವಹಿಸಬೇಕು. ಈ ಯೋಜನೆಯ ಅನುಕೂಲವನ್ನು ಮಧ್ಯವತಿರ್ಗಳು ತೆಗೆದುಕೊಳ್ಳದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಖರೀದಿ ಕೇಂದ್ರಗಳ ಮುಂದೆ ಬ್ಯಾನರ್ ಅಳವಡಿಕೆ, ಕರಪತ್ರ ಮೂಲಕ ಖರೀದಿ ಕೇಂದ್ರಗಳ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಹಾಗೂ ಖರೀದಿಸುವ ಹಸಿಶುಂಠಿ ದಾಸ್ತಾನು ಮಾಡಲು ಗೋದಾಮುಗಳನ್ನು ಕಾಯ್ದಿರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಂಟಿ ಕೃಷಿ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಾಖಾ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದಶಿರ್ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
