ಹಾವೇರಿ: ಕಬ್ಬು ಬೆಳೆಗಾಗರರ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಫೆ.6ರಂದು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಅದೇ ರೀತಿ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಬೇಕು. ಕಬ್ಬಿನ ಎಫ್ಆರ್ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಈಗಾಗಲೇ ಕಬ್ಬು ಕಟಾವು ಸಾಗಣೆ ದರವನ್ನು ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಕಡಿತ ಮಾಡಿದ್ದು, ಆ ಹೆಚ್ಚುವರಿ ಹಣವನ್ನು ರೈತರಿಗೆ ವಾಪಸ್ ಕೊಡಿಸಬೇಕು.
2022- 23ರ ಸಾಲಿನಲ್ಲಿ ಕಬ್ಬಿಗೆ ಟನ್ಗೆ 150 ಹೆಚ್ಚುವರಿ ದರವನ್ನು ಕೂಡಲೇ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವೇ ಸರ್ಕಾರವೇ ರೈತರಿಗೆ ಪಾವತಿಸಬೇಕು. ರಾಜ್ಯ ಸರ್ಕಾರದ ಬಜೆಟ್ನಲ್ಲಿ ಈ ಘೋಷಣೆಗಳನ್ನು ಮಾಡಬೇಕು. ರೈತಪರ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸುವ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ ನೇತೃತ್ವದಲ್ಲಿ ಬೆಂಗಳೂರು ಚಲೋ ನಡೆಸಲಾಗುತ್ತಿದೆ. ಜಿಲ್ಲೆಯಿಂದಲೂ ನೂರಾರು ಕಬ್ಬು ಬೆಳೆಗಾರರು ಭಾಗವಹಿಸುವರು ಎಂದು ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.