ಹಾವೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ವೇಳಾಪಟ್ಟಿ ತಯಾರಿಸುವ ಉದ್ದೇಶದಿಂದ ಅಕ್ಟೋಬರ್-2023ರಂದು ಸತತ ಒಂದು ತಿಂಗಳ ಅವಧಿಗೆ ಗ್ರಾಮೀಣ ಭಾಗದ ಎಲ್ಲ ಮನೆ ಮನೆಗಳಿಗೆ ಜಾಥಾ ಕಾರ್ಯಕ್ರಮದ ಮಾಹಿತಿ ಜಾಗೃತಿ ರಥಕ್ಕೆ ಬ್ಯಾಡಗಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಚಾಲನೆ ನೀಡಿದರು.
ನಂತರ ಮಾತನಾಡಿದ ಡಿಸಿ ರಘುನಂದನ ಮೂರ್ತಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಮಹಾತ್ಮಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಪ್ರತಿ ವರ್ಷ 100 ದಿನಗಳ ಉದ್ಯೋಗ ಒದಗಿಸುವ ಯೋಜನೆಯಾಗಿದೆ. ಜನರು ವಲಸೆ ಹೋಗದಂತೆ ತಡೆಗಟ್ಟಲು ಹಾಗೂ ಜನರಿಗೆ ತಮ್ಮ ಸ್ವಂತ ಊರಿನಲ್ಲಿಯೇ ಉದ್ಯೋಗ ಒದಗಿಸಿ ಆರ್ಥಿಕವಾಗಿ ಸಬಲರಾಗಲು, ಸ್ಥಳೀಯ ಸಂಪನ್ಮೂಲಗಳ ರಕ್ಷಣೆ, ಮೂಲ ಸೌಕರ್ಯಗಳ ಒದಗಿಸುವುದು ಮತ್ತು ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ 100 ದಿನಗಳ ಉದ್ಯೋಗ ಒದಗಿಸಲಾಗುತ್ತಿದೆ. ಪ್ರತಿ ದಿನ 316 ರೂ. ಹೆಣ್ಣು ಮತ್ತು ಗಂಡಿಗೆ ಸಮಾನ ಕೂಲಿ ನೀಡಲಾಗುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿ.ಪಂ. ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳ್ಳಿ, ಬ್ಯಾಡಗಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜನ ಕೆಂ.ಎಂ. ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.