ಹಾವೇರಿ: ಕಳೆದ ಎರಡು ತಿಂಗಳಿನಿಂದ ನರೇಗಾ ಕೂಲಿ ಹಣ ಬಂದಿಲ್ಲ. ಈ ಕೂಡಲೇ ನರೇಗಾ ಕೂಲಿ ಹಣ ಬಿಡುಗಡೆ ಮಾಡಬೇಕು. 50 ಮಾನವ ದಿನಗಳ ಬಿಡುಗಡೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ವ್ಯವಸಾಯ ಕೂಲಿ ವೃತ್ತಿಪರ ಯೂನಿಯನ್ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಲಾಯಿತು.
ಗ್ರಾಮೀಣ ಭಾಗದಲ್ಲಿ ಮದ್ಯದ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಗಟ್ಟಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ಶಿಷ್ಯವೇತನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು. ನರೇಗಾ ಕೆಲಸದ ಸ್ಥಳದಲ್ಲಿ ನೀರು, ನೆರಳಿನ ವ್ಯವಸ್ಥೆ ಮಾಡಬೇಕು. ವಿಧವೆಯರಿಗೆ ಕೆಲಸದಲ್ಲಿ ಶೇ.50ರಷ್ಟು ರಿಯಾಯ್ತಿ ನೀಡಬೇಕು. ಗೃಹಲಕ್ಷ್ಮೀ ಹಣ ಕೈಸೇರದವರಿಗೆ ಹಣ ಬಿಡುಗಡೆ ಮಾಡಬೇಕು. ವೃದ್ಯಾಪ್ಯ ಪಿಂಚಣಿ 5 ಸಾವಿರ ರೂ.ಗೆ ಏರಿಸಬೇಕು. ಕಾರ್ಮಿಕರಿಗೆ ಉತ್ತಮವಾದ ಮನೆಗಳನ್ನು ನಿರ್ಮಿಸಿಕೊಡಬೇಕು. ಕೃಷಿ ಕಾರ್ಮಿಕರಿಗೆ ಇಎಸ್ಐ ಸೌಲಭ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಪ್ರತಿಭಟನಾಕಾರರು ಮುಂದಿಟ್ಟರು.
ಎಡಿಸಿ ಪೂಜಾರ ವೀರಮಲ್ಲಪ್ಪ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.