More

    ಹೆಣ್ಣುಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ನೀಡಿ; ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಅಕ್ಷಯ ಶ್ರೀಧರ ಹೇಳಿಕೆ

    ಹಾವೇರಿ: ಹೆಣ್ಣು ಮಕ್ಕಳನ್ನು ಉಳಿಸುವ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡುತ್ತಿದೆ. ಪಾಲಕರು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಬೇಕು. ಅವರ ಆಸೆಗಳಿಗೆ ನಿರ್ಬಂಧ ಹಾಕಬಾರದು. ಅವರಿಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಹೇಳಿದರು.
    ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಗಳನ್ನು ಉಳಿಸಿ ಮಗಳನ್ನು ಓದಿಸಿ ಸಹಿ ಸಂಗ್ರಹಣ ಅಭಿಯಾನಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
    ಮಹಿಳೆಯರು ರಾಷ್ಟ್ರಪತಿ, ಪ್ರಧಾನಿ, ಸಚಿವೆ, ವೈದ್ಯೆ, ಕ್ರೀಡಾಪಟು ಹೀಗೆ ಹಲವಾರು ರಂಗಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅಸಾಧ್ಯವಾದದ್ದು ಯಾವುದೂ ಇಲ್ಲ, ವಿದ್ಯಾರ್ಥಿನಿಯರು ಸಾಧನೆಗೆ ಮನಸ್ಸು ಮಾಡಬೇಕು. ಹೆಣ್ಣು ಮಕ್ಕಳ ಕನಸುಗಳನ್ನು ನಾವೆಲ್ಲರೂ ಗೌರವಿಸಬೇಕು ಎಂದರು.
    ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ ಮಾತನಾಡಿ, ಮಹಿಳೆ ಮನೆಯ ಆಧಾರ ಸ್ಥಂಬವಿದ್ದಂತೆ, ಶಾಲೆಯಲ್ಲಿ ಮಹಿಳಾ ಉಪಾಧ್ಯಾಯರಿದ್ದರೆ ಆ ಶಾಲೆ ಚೆನ್ನಾಗಿ ನಡೆಯುತ್ತದೆ. ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ, ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿ ಇರುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
    ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ ಮಾತನಾಡಿ, ಮಾತೃ ದೇವೋಭವ, ತಾಯಿಯೇ ದೇವರು ಎಂಬುದು ನಮ್ಮ ಸಂಸ್ಕೃತಿ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ. ಗಂಡು ಮಗು ವಂಶೋದ್ಧಾರಕ ಎಂಬ ತಪ್ಪು ಕಲ್ಪನೆಯಿಂದ ಗಂಡು ಮಕ್ಕಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಆರ್ಥಿಕ, ಸಾಮಾಜಿಕ ಅನಕ್ಷರತೆಯಿಂದ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗಲು ಕಾರಣವಾಗಿದೆ. ಲಿಂಗ ಅಸಮಾನತೆಯ ಮನೋಧರ್ಮ ಬದಲಾಗಬೇಕು. ಗಂಡು-ಹೆಣ್ಣು ಎಂಬ ಬೇದಭಾವ ಮಾಡದೇ ಇಬ್ಬರನ್ನು ಸಮಾನವಾಗಿ ಕಾಣಬೇಕು ಎಂದರು.
    ಜಿಪಂ ಸಿಇಒ ಅಕ್ಷಯ ಶ್ರೀಧರ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮುದ್ದು ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದರು.
    ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ವಿನಾಯಕ ಜೋಶಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ, ಪದವಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಎಸ್.ಮಜೀದ್ ಉಪಸ್ಥಿತರಿದ್ದರು.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಪ್ರತಿಜ್ಞಾ ವಿಧಿ ಬೋಧಿಸಿದರು. ಸೋಮನಗೌಡ ಗಾಳಿಗೌಡ್ರ ನಿರೂಪಿಸಿದರು. ಜಿಲ್ಲಾ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts