More

    ರಾಮಾಯಣ ಜಗತ್ತಿನ ವಿಶಿಷ್ಟ ಕೊಡುಗೆ; ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ರುದ್ರಪ್ಪ ಲಮಾಣಿ ಹೇಳಿಕೆ

    ಹಾವೇರಿ: ಬುಡಕಟ್ಟು ಸಮುದಾಯದಲ್ಲಿ ಜನಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡಿದರು. ಇಂತಹ ಮಹನೀಯರನ್ನು ಒಂದು ಸಮುದಾಯಕ್ಕೆ ಸೀಮತಗೊಳಿದೇ ರಾಷ್ಟ್ರೀಯ ನಾಯಕರನ್ನಾಗಿ ನೋಡಬೇಕು ಎಂದು ಶಾಸಕ ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
    ನಗರದ ಜಿಲ್ಲಾ ಗುರುಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ, ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ
    ವಾಲ್ಮೀಕಿ ಭವನ ಉದ್ಘಾಟನೆ ಎಲ್ಲರ ಕನಸಾಗಿದೆ. ಮುಂದಿನ ಜಯಂತಿಯಂದು ವಾಲ್ಮೀಕಿ ವೃತ್ತ, ವಾಲ್ಮೀಕಿ ಪುತ್ಥಳಿ ಹಾಗೂ ವಾಲ್ಮೀಕಿ ಭವನದ ಉದ್ಘಾಟನೆ ಮಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ. ವಾಲ್ಮೀಕಿ ಭವನದ ಕಾಮಗಾರಿಗೆ 2.45 ಲಕ್ಷ ಮಂಜೂರಾಗಿದ್ದು, ಈ ಪೈಕಿ 65 ಲಕ್ಷ ರೂ. ಬಿಡುಗಡೆಯಾಗಿದೆ. ಭವನದ ಕೆಲಸ ಆರಂಭಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಹಂತಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
    ಜಿಲ್ಲಾಡಳಿತ ಭವನದ ಎದುರಿನ 9.30 ಎಕರೆ ಸರ್ಕಾರಿ ಜಮೀನನ್ನು ಪ್ರೊ.ಎಲ್.ಜಿ.ಹಾವನೂರ ಮ್ಯೂಸಿಯಂ ನಿರ್ಮಾಣಕ್ಕೆ ನೀಡುವಂತೆ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
    ಉಪನ್ಯಾಸಕರಾಗಿ ಭಾಗವಹಿಸಿದ್ದ ಬೆಂಗಳೂರಿನ ವಕೀಲ ಅನಂತ ನಾಯಕ ಮಾತನಾಡಿ, ವಾಲ್ಮೀಕಿ ಅವರು ಅರಿವಿನ ಸಂಕೇತವಾಗಿದ್ದಾರೆ. ಕವಿ, ಲೇಖಕ ಮಾತ್ರವಲ್ಲ ಅರಿವಿನ ಬೆಳಕಾಗಿದ್ದಾರೆ. ಅವರ ಬೆಳಕು ಜಗತ್ತಿನಾದ್ಯಂತ ಹಬ್ಬಿದೆ. ರಾಮಾಯಾಣದಲ್ಲಿ ಬರುವ ಪಾತ್ರಗಳನ್ನು ಜನ ಪೂಜಿಸುತ್ತಾರೆ. ಆದರೆ, ಜಗತ್ತಿಗೆ ರಾಮಾಯಾಣ ನೀಡಿದ ಧೀಮಂತ ವ್ಯಕ್ತಿಯನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ಕಾರ್ಯಕ್ರಮದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಕೊಟ್ರೇಶಪ್ಪ ಬಸೇಗೆಣ್ಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಮಂಜು ನಾಯ್ಕ, ತಹಶೀಲ್ದಾರ್ ಶಂಕರ ಜಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ, ಜಿ.ಬಿ.ಪಾಟೀಲ, ಬಸವರಾಜ ಹಾದಿಮನಿ, ಹನುಮಂತಪ್ಪ, ಮತ್ತಿತರರು ಉಪಸ್ಥಿತರಿದ್ದರು.
    ಪ್ರತಿಭಾವಂತರಿಗೆ ಸನ್ಮಾನ
    ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸಮುದಾಯ ಧೀರಜ ಕರಿಬಸಣ್ಣವರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ಸಿಂಚನಾ, ಶಿಲ್ಪಾ ಮರಿಯಣ್ಣನವರ, ಮೇಘಾ ನಾಯ್ಕರ ಹಾಗೂ ಭಾರತ ಸರ್ಕಾರದ ಇನ್ಸಪಾಯರ್ ವಾರ್ಡ್‌ನಲ್ಲಿ ಪ್ರದರ್ಶನ ನೀಡಿದ ಸಾಯಿಲಕ್ಷ್ಮೀ ವೀರಾಪೂರ ಅವರನ್ನು ಸನ್ಮಾನಿಸಲಾಯಿತು.
    ಆಕರ್ಷಕ ಮೆರವಣಿಗೆ
    ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಪುರಸಿದ್ವೇಶ್ವರ ದೇವಸ್ಥಾನದಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿ ಗುರುಭವನ ತಲುಪಿತು. ಮೆರವಣಿಗೆಯಲ್ಲಿ ಶಾಸಕರು, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts