More

    ‘ಕಾಸಿಗಾಗಿ ಹುದ್ದೆ’ಯಲ್ಲಿ 500 ಕೋಟಿ ರೂ. ಕೈಬದಲು: ಕುಮಾರಸ್ವಾಮಿ ಗಂಭೀರ ಆರೋಪ

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸತತ ಎರಡು ತಿಂಗಳಿಂದ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಅವಧಿಯಲ್ಲಿ ಕಾಸಿಗಾಗಿ ಹುದ್ದೆ ವ್ಯವಹಾರದಲ್ಲಿ 500 ಕೋಟಿ ರೂಪಾಯಿಗೂ ಹೆಚ್ಚು ಹಣ ಕೈ ಬದಲಾಗಿರುವ ಮಾಹಿತಿ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

    ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವರ್ಗಾವರ್ಗಿ ದಂಧೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಬಗ್ಗೆ ನನಗೆ ಮಾಹಿತಿ ಇದೆ. ಕರ್ನಾಟಕ ಸಮೃದ್ಧವಾಗಿದೆ. ಜನ ಪ್ರಾಮಾಣಿಕವಾಗಿ ತೆರಿಗೆ ಕಟ್ಟಿ ಖಜಾನೆ ತುಂಬಿಸುತ್ತಿದ್ದಾರೆ. ಕಾಂಗ್ರೆಸ್‌ನವರು ಇಲ್ಲಿ ಚೆನ್ನಾಗಿ, ಪೊಗದಸ್ತಾಗಿ ಮೇಯುತ್ತಿದ್ದಾರೆ. ಆ ಮೇವನ್ನು ಇಡೀ ದೇಶಕ್ಕೆಲ್ಲ ಹಂಚಲು ಹೊರಟಿದ್ದಾರೆ. ಇದೇನಾ ಕರ್ನಾಟಕದ ಮಾದರಿ ಅಂದ್ರೆ? ಇದೇನಾ ಹೊಸ ಭರವಸೆ, ಹೊಸ ಕನಸು? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

    ಈಗ ನಡೆಯುತ್ತಿರುವ ಯೋಜನೆಗಳ ಕಾಮಗಾರಿಗಳ ಒಟ್ಟು ಅಂದಾಜು ವೆಚ್ಚವನ್ನು ಶೇ. 20-30ಕ್ಕೆ ಹೆಚ್ಚಳ ಮಾಡಿಕೊಳ್ಳಲಾಗುತ್ತಿದೆ. ಕಮಿಷನ್ ಹೊಡೆಯೋದಕ್ಕೆ ಏನು ಬೇಕೋ ಅದನ್ನು ಮಾಡಿಕೊಳ್ಳುತ್ತಿದ್ದಾರೆ. ಸಚಿವರೊಬ್ಬರು ಒಂದು ಪತ್ರಿಕೆಯ ಕಟಿಂಗ್ ಇಟ್ಟುಕೊಂಡು ಎಲ್ಲೆಲ್ಲಿ ರೇಟ್ ಫಿಕ್ಸ್ ಆಗಿದೆ ಅಂತ ಹೇಳಿದರು. ನಾನು ಆ ಕಟಿಂಗ್​ನಲ್ಲಿರುವ ಸುದ್ದಿ ಯಾವುದು ಎಂದು ಪತ್ತೆ ಹಚ್ಚಿದೆ. ಅದು 2013ರಿಂದ 2018ರವರೆಗೆ ನಡೆದಿರುವ ವರ್ಗಾವಣೆ ದಂಧೆಗೆ ಸಂಬಂಧಿಸಿದ ಸುದ್ದಿ, ಮುಖ್ಯ ಎಂಜಿನಿಯರ್ ಹುದ್ದೆಗೆ 30 ಕೋಟಿ ಕಪ್ಪ ಎನ್ನುವ ಸುದ್ದಿಯ ಕಟಿಂಗ್ ಅದು. ಅದು ರೇವಣ್ಣ ಅವರದ್ದಾಗಲಿ, ನನ್ನ ಕಾಲದ್ದಾಗಲಿ ಆಗಿರಲಿಲ್ಲ ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.

    ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಸೌದಿಯಿಂದ ಬಂದು ಹರಕೆ ಸಲ್ಲಿಸಿದ ಅಭಿಮಾನಿ; ಚಿನ್ನಲೇಪಿತ ಬೆಳ್ಳಿಯ ನಾಗಾಭರಣ ಅರ್ಪಣೆ

    ರಾಜಕೀಯ ನಿವೃತ್ತಿ ಸವಾಲು

    ನನ್ನ ವಿಚಾರದಲ್ಲಿ ಒಂದೇ ಒಂದು ವರ್ಗಾವಣೆ ಪ್ರಕರಣ ತೋರಿಸಿ ಸಾಬೀತು ಮಾಡಿದರೆ ಸಕ್ರಿಯ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ. ಅಂಥ ಮಾತು ಹೇಳುವ ಧೈರ್ಯ ಇವರಿಗೆ ಇದೆಯಾ? ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹೇಗೆಲ್ಲ ಮೇಯುತ್ತಿದ್ದಾರೆ ಎಂಬುದು ಎಲ್ಲರಿಗೂ ಚೆನ್ನಾಗಿ ಅರ್ಥವಾಗುತ್ತಿದೆ. ಅಧಿಕಾರಿಯೊಬ್ಬರು ನನ್ನನ್ನು ಭೇಟಿಯಾಗಿದ್ದಾಗ ವರ್ಗಾವಣೆ ದಂಧೆಯ ಬಗ್ಗೆ ಹೇಳಿದರು. ಈವರೆಗೂ ಕಡಿಮೆ ಎಂದರೂ 500 ಕೋಟಿ ರೂಪಾಯಿಗೂ ಮಿಕ್ಕಿ ವ್ಯವಹಾರ ನಡೆದಿದೆ. ಸರಕಾರದಿಂದ ವರ್ಗಾವಣೆ ಕಿರುಕುಳಕ್ಕೆ ಒಳಗಾಗಿರುವ ಅಧಿಕಾರಿಗಳು ಸುಳ್ಳು ಹೇಳುತ್ತಾರೆಯೇ? ಇದಕ್ಕೆಲ್ಲ ಸಾಕ್ಷಿ ಸಂಗ್ರಹ ಮಾಡಲು ಸಾಧ್ಯವೇ? ಈ ರೀತಿಯಾದರೆ ರಾಜ್ಯ ಉಳಿಯುತ್ತಾ ಎಂದು ಪ್ರಶ್ನಿಸಿದರು.

    ಇದಾದ ಮೇಲೆ ರೇಟ್ ಕಾರ್ಡ್ ರಿಲೀಸ್ ಆಯಿತು. ಎಕ್ಸೆಲ್ ಶೀಟ್‌ನಲ್ಲಿ ಇವರ ಭ್ರಷ್ಟಾಚಾರದ ವಿಶ್ವರೂಪ ಬಯಲಾಯಿತು. ಇವರ ಹಣೆಬರಹ ಏನೂಂತ ಇಡೀ ಜಗತ್ತಿಗೆ ಗೊತ್ತಾಯಿತು. ನನ್ನ ಕಾಲದಲ್ಲಿ ಏನೂ ಇಲ್ಲ. 2008 ರಿಂದ 2013ರ ಅವಧಿಯಲ್ಲಿ ಮಾಗಡಿ ವಿಧಾನಸಭೆಯಲ್ಲಿ ನಡೆದ ರಸ್ತೆ ಕಾಮಗಾರಿ ಹೇಳಲಿ ನೋಡೋಣ. ಇದು ಸಿದ್ದರಾಮಯ್ಯ, ಮಹದೇವಪ್ಪ ಅವರ ಕಾಲದ್ದು ಎಂದು ಕುಮಾರಸ್ವಾಮಿ ಹೇಳಿದರು.

    ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts