ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಛಾಟಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ನೇಮಕ ಮಾಡಿದ್ದಾರೆ.
ಇಂದು ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ ದೇವೇಗೌಡ, ಹಿಂದಿನ ಅಧ್ಯಕ್ಷರು ಈ ಹಿಂದೆ ಏನು ಹೇಳಿದ್ದಾರೋ ಅದನ್ನು ನಾನಿಲ್ಲಿ ಪ್ರಸ್ತಾಪ ಮಾಡುವುದಿಲ್ಲ. ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಿ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಿದ್ದೇವೆ. ಅವರಿಂದ ತೆರವಾದ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಿದ್ದೇವೆ ಎಂದರು.
19 ಶಾಸಕರು, 8 ಮೇಲ್ಮನೆ ಸದಸ್ಯರ ಅಭಿಪ್ರಾಯ ಪಡೆಯಲಾಗಿದೆ. ನಾವಿಂದು ಬಿಜೆಪಿ ಜತೆ ಹೋಗಬೇಕಾದ ಸನ್ನಿವೇಶವನ್ನು ಸೃಷ್ಟಿ ಮಾಡಿದ್ದು ಯಾರು ಎಂದು ಪ್ರಶ್ನೆ ಮಾಡುವ ಮೂಲಕ ಪರೋಕ್ಷವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಅಸಮಾಧಾನ ಹೊರಹಾಕಿದ ಎಚ್ಡಿಡಿ, ನಾವು ಬಿಜೆಪಿ ಜತೆ ಲೋಕಸಭೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದೇವೆ ಅಷ್ಟೇ ಹಾಗಂತ ಅವರ ಸರ್ಕಾರದಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಮೈತ್ರಿಯಿಂದ ಜೆಡಿಎಸ್ ಸಿದ್ಧಾಂತಗಳಿಗೆ ಯಾವುದೇ ತೊಡಕಾಗುವುದಿಲ್ಲ. ಈಗಲೂ ಸಾಕಷ್ಟು ಯುವ ಮುಸ್ಲಿಂ ಮುಖಂಡರು ನಮ್ಮನ್ನು ಬೆಂಬಲಿಸುತ್ತಿದ್ದಾರೆ ಎಂದು ಎಚ್ಡಿಡಿ ಹೇಳಿದರು.
32 ಜನ ಶಾಸಕರು ಒಮ್ಮುಮತದಿಂದ ಮುಸ್ಲಿಂ ಸಮುದಾಯದವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೆವು. ಈಗ ನಾವು ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಧ್ಯಕ್ಷರನ್ನಾಗಿ ನೇಮಕ ಮಾಡಲು ತೀರ್ಮಾನಿಸಿದ್ದೇವೆ. ಇಬ್ರಾಹಿಂ ಅವರನ್ನು ಉಚ್ಚಾಟಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.
ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಎಚ್ಡಿಕೆ, ವಿಧಾನಸಭೆಯ ನಂತರದ ಕೆಲವು ರಾಜಕೀಯ ಬೆಳವಣಿಗೆಗಳು ನಡೆದಿವೆ. ಹೀಗಾಗಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಹಳೆಯ ಘಟಕವನ್ನು ವಿಸರ್ಜನೆ ಮಾಡಿ, ಒಂದು ಹೊಸ ಅಡಾಕ್ ಸಮಿತಿಯನ್ನು ಇಂದು ರಚನೆ ಮಾಡಿದ್ದಾರೆ. ನನಗೆ ಹೊಸ ಜವಾಬ್ದಾರಿಯನ್ನು ನೀಡಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ಹೇಳಿದರು.
ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತ ಸಾವಿಗೆ ಶರಣು: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ
ನಟಿ ಊರ್ವಶಿ ರೌಟೇಲಾಗೆ ಇಮೇಲ್ ಕಳುಹಿಸಿದ ಕಳ್ಳ…ಐಫೋನ್ ಹಿಂದಿರುಗಿಸುವುದಕ್ಕೆ ಪ್ರತಿಯಾಗಿ ಇಟ್ಟ ಬೇಡಿಕೆಯೇನು ಗೊತ್ತಾ?