ಬೆಂಗಳೂರು: ಬೇಸಿಗೆಯಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿ ಎಲ್ಲ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿ ಹಾಗೂ ಮಾನ್ಯತೆ ಪಡೆದ ಎಲ್ಲ ಆಸ್ಪತ್ರೆಗಳಲ್ಲಿ ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ, ಕಾರ್ಯಶೀಲತೆಯನ್ನು ಪರಿಶೀಲಿಸಬೇಕು. ಮುಂಜಾಗೃತಾ ಕ್ರಮಗಳ ಪಾಲನೆಯನ್ನೂ ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ಅನುಪಾಲನಾ ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ.
ಆಸ್ಪತ್ರೆಗಳ ಎಲ್ಲ ಪ್ರದೇಶಗಳಲ್ಲಿ ಹೊಗೆ ಪತ್ತೆ ಸಾಧನ ಹಾಗೂ ಫೈರ್ ಅಲಾರ್ಮ್ ಅಳವಡಿಸಬೇಕು. ವೈದ್ಯಕೀಯ ಆಮ್ಲಜನಕ ಘಟಕಗಳನ್ನೂ ಪರಿಶೀಲಿಸಿ, ಸುರಕ್ಷತೆಗೆ ಆದ್ಯತೆ ನೀಡಬೇಕು. ಸಿಬ್ಬಂದಿಗೂ ತುರ್ತ ಸಂದರ್ಭದಲ್ಲಿ ಪರಿಸ್ಥಿತಿ ಎದುರಿಸುವ ಬಗ್ಗೆ ತರಬೇತಿ ನೀಡಬೇಕು ಎಂದು ತಾಕೀತು ಮಾಡಲಾಗಿದೆ.