ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡು ಪ್ರದೇಶದಲ್ಲಿ ತೀವ್ರಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚುರುಕುಗೊಂಡಿದೆ.
ಕಳೆದೊಂದು ವಾರದಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಕಡೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಗುರುವಾರ ವರ್ಷಧಾರೆ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯ ಕ್ಯಾಸಲ್ರಾಕ್ನಲ್ಲಿ 170 ಮಿ.ಮೀ. ಅತ್ಯಧಿಕ ಮಳೆಯಾಗಿದೆ. ಮುಂದಿನ ಕೆಲ ದಿನಗಳಲ್ಲಿ ಭಾರೀ ಮಳೆ ಪ್ರಮಾಣದಲ್ಲಿ ತುಸು ಇಳಿಕೆಯಾಗುವ ಸಾಧ್ಯತೆ ಇದೆ. ಆದರೂ, ಶುಕ್ರವಾರ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಬೋಧಕೇತರ ಕಾರ್ಯಗಳಿಗೆ ಶಿಕ್ಷಕರನ್ನು ನಿಯೋಜಿಸದಂತೆ ಸೂಚನೆ
ಮಹಾರಾಷ್ಟ್ರದಲ್ಲಿ ಭಾರೀ ಮಳೆ ಕಾರಣ ಕೃಷ್ಣಾ ನದಿ ಪಾತ್ರವಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹದ ಸ್ಥಿತಿ ಕಾಣಬೇಕಿದೆ. ಇಲ್ಲೆಲ್ಲ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ಉತ್ತರ ಒಳನಾಡಿನ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹೆಚ್ಚಿನ ಮಳೆ ನಿರೀಕ್ಷಿಸಲಾಗಿದೆ. ವಾರಾಂತ್ಯದವರೆಗೆ ಮಲೆನಾಡು ಸೇರಿದಂತೆ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಮದ್ರಕ್ಕೆ ಇಳಿಯದಂತೆ ಸೂಚನೆ
ಕರಾವಳಿಯ ಮೂರೂ ಜಿಲ್ಲೆಯ ತೀರದುದ್ದಕ್ಕೂ ಮೇಲ್ಮೈ ಗಾಳಿಯು 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.