ರಾಣೆಬೆನ್ನೂರ: ಅಯೋಧ್ಯೆಯ ರಾಮಮಂದಿರದಲ್ಲಿ ಜ. 22ರಂದು ಪ್ರತಿಷ್ಠಾಪನೆ ಆಗಲಿರುವ ರಾಮಲಲ್ಲಾ ಮೂರ್ತಿಯ ಅಂಗವಾಗಿ ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಶ್ರೀ ದುಂಡಿ ಬಸವೇಶ್ವರ, ಆಂಜನೇಯ ಸ್ವಾಮಿ ಹಾಗೂ ಮಹರ್ಷಿ ವಾಲ್ಮೀಕಿ ಸೇರಿ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ ರಾಮ ನಾಮ ಜಪ, ಮಧ್ಯಾಹ್ನ 12.30ಕ್ಕೆ ಆಂಜನೇಯ ಸ್ವಾಮಿ ದೇವಸ್ಥಾನದ ಗೋಪುರಕ್ಕೆ ಭಗವಾನ್ ಧ್ವಜ ಏರಿಸುವುದು ಹಾಗೂ ಸಂಜೆ 7 ಗಂಟೆಗೆ ದುಂಡಿ ಬಸವೇಶ್ವರ ಸಮುದಾಯ ಭವನದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ಸಂಜೆ ಪ್ರತಿಯೊಬ್ಬರ ಮನೆಯಲ್ಲೂ ದೀಪ ಬೆಳಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.